Showing posts with label ಉದಯವಾಣಿ ಕಾಲಮ್. Show all posts
Showing posts with label ಉದಯವಾಣಿ ಕಾಲಮ್. Show all posts

Saturday, January 2, 2010

ಕವಬಾಟನ ‘ಸಾವಿರ ಪಕ್ಷಿಗಳು’


ಯಸುನಾರಿ ಕವಬಾಟ- ಜಪಾನೀ ಸಾಹಿತ್ಯದಲ್ಲಿ ಅತಿ ವಿಶಿಷ್ಟವಾದ ಧ್ವನಿ. ಮೊಟ್ಟ ಮೊದಲ ಬಾರಿಗೆ ಜಪಾನಿನ ಸಾಹಿತ್ಯಕ್ಕೆ ನೊಬೆಲ್ ಪ್ರಶಸ್ತಿಯನ್ನು ತಂದುಕೊಟ್ಟ ಹೆಗ್ಗಳಿಕೆ ಈತನದು. ತನ್ನ ಸರಳವಾದ ಗದ್ಯದಿಂದಲೇ ಮಹತ್ತರವಾದ, ಜೀವನದ ಅನೇಕ ಸಂಕೀರ್ಣಗಳ ಅರ್ಥವನ್ನು ಹುಡುಕಹೊರಟು ಅದರಲ್ಲಿ ಯಶಸ್ಸನ್ನು ಪಡೆದಾತ. ಭಾಷೆ ಸರಳವಾಗುತ್ತಾ ಹೋದಲ್ಲಿ ಅಪ್ರಯತ್ನಪೂರ್ವಕವಾಗಿ ಹೇಳುವ ಕಥನವೂ, ಆಯ್ದುಕೊಳ್ಳುವ ವಿಷಯಗಳೂ ಸರಳವಾಗುತ್ತವೆ ಎಂಬ ನಂಬಿಕೆಗೆ ತದ್ವಿರುದ್ಧವಾದ ಚಿಂತನಕ್ರಮ ಈತನದು. ಭಾಷೆಯನ್ನು ಮೇಣದಂತೆ ತನಗೆ ಬೇಕಾದ ಅಭಿವ್ಯಕ್ತಿಗೆ ರೂಡಿಸಿಕೊಂಡದ್ದು ಈತನ ಸಾಧನೆ. ಎಲ್ಲಿಯೂ ಈತ ಝಳಪಿಸುವುದಿಲ್ಲ, ಬೊಬ್ಬೆ ಹಾಕುವುದಿಲ್ಲ ಅಥವಾ ಗರ್ಜಿಸುವುದಿಲ್ಲ. ತನ್ನ ಮೃದುವಾದ ಧ್ವನಿಯಲ್ಲಿಯೇ ಮೆದುವಾದ, ಆಪ್ತವಾದ ಆದರೆ ಅಷ್ಟೇ ಗರಿಮುರಿಯಾದ ಗದ್ಯವನ್ನು ಉಣಬಡಿಸುವುದು ಈತನ ವೈಶಿಷ್ಟ್ಯ. ಭಾಷೆ ಸರಳವಾದಷ್ಟೂ ಸಂಕೀರ್ಣ ಸಂಗತಿಗಳು ಓದುಗರಿಗೆ ಹೆಚ್ಚು ಆಪ್ತವಾಗುತ್ತವೆ ಎಂತಲೇ ಈತ ಕೊನೆತನಕ ನಂಬಿದ್ದ. ಈತನ ಕಥನದ ಶೈಲಿ ಹೈಕುಗಳಿದ್ದಂತೆ, ಮೂರೇ ಸಾಲಿನಲ್ಲಿ ಹೇಳಬೇಕಾದ್ದು ಹೇಳಿ ಇನ್ನೂ ಏನೋ ಇದೆ ಎನಿಸುವ, ಮತ್ತಿನ್ನಷ್ಟು ಓದಬೇಕು ಎನಿಸುವ ಹೃದ್ಯ ಶೈಲಿ ಈತನದು.

ಕವಬಾಟನ ಒಟ್ಟು ಕಥನದ ಥೀಮ್-ಸ್ಥೂಲವಾಗಿ ಹೇಳಬೇಕೆಂದರೆ ‘ತೀವ್ರವಾದ ಹಂಬಲ’. ಈ ತೀವ್ರವಾದ ತೀರದ ಹಂಬಲ ಅವನ ಮಹತ್ವದ ಕಾದಂಬರಿಗಳಾದ ‘ಸ್ನೋ ಕಂಟ್ರಿ’ ‘ಥೌಸೆಂಡ್ ಕ್ರೇನ್ಸ್’ ಮುಂತಾದುವುಗಳಲ್ಲಿ ಪುನರಾವರ್ತಿತವಾಗಿವೆ, ಈ ಹಂಬಲವೇ ನಮ್ಮ ಜೀವನದ ಉಸಿರು ಎಂದು ತಿಳಿದಾತ. ಈ ಹಂಬಲ ಎಷ್ಟು ತೀವ್ರವಾಗಿರಬೇಕೆಂದರೆ ಅದರ ಸಾಧನೆಯ ಹಾದಿಯಲ್ಲಿ ನಾವು ಮುಕ್ತಿಹೊಂದಬೇಕೇ ಹೊರತು ಸಾಧಿಸಿಬಿಟ್ಟರೆ ಈ ಹಂಬಲಕ್ಕೇ ಅರ್ಥವಿರುವುದಿಲ್ಲ ಎನ್ನುವುಷ್ಟು ಅಚಲವಾಗಿತ್ತು ಆತನ ನಂಬಿಕೆ. ಹಾಗಾಗಿಯೇ ಯಶಸ್ಸಿನ ಬಗ್ಗೆಯೂ ಆತನಿಗೆ ನಂಬಿಕೆಯಿರಲಿಲ್ಲ. ಈ ರೀತಿಯ ತೀರದ ಹಂಬಲವನ್ನು ಆತನೇ ಕೆಲವುಕಡೆ ‘ವ್ಯರ್ಥ ಪ್ರಯತ್ನ’(Wasted efforts)ಗಳೆಂದು ಕರಕೊಂಡಿದ್ದಾನೆ. ಇಂಥ ಪ್ರಯತ್ನದಲ್ಲಿ ಕೂಡ ಬದುಕನ್ನು ತೀವ್ರವಾಗಿ ಅನುಭವಿಸುವ ಹಂಬಲವಿದ್ದಾಗ ಅದು ವ್ಯರ್ಥವಲ್ಲ ಎಂದು ಈತನ ನಂಬಿಕೆ.

ಈತ ನಿತ್ಯನಗರಿಯ ತಾಕಲಾಟವನ್ನು ಬರೆಯುವ ವಾಸ್ತವವಾದಿ ಬರಹಗಾರರನ್ನು ದ್ವೇಷಿಸುತ್ತಿದ್ದ. ಆತನಿಗೆ ಸೌಂದರ್ಯದ ಅಸ್ತಿತ್ವದ ಬಗ್ಗೆ ಬಹಳವಾದ ನಂಬಿಕೆಯಿದ್ದಿದ್ದಷ್ಟೇ ಅಲ್ಲ, ಈ ಸೌಂದರ್ಯವನ್ನು ಅರಸುವುದು ಮತ್ತು ಅದನ್ನು ಅದನ್ನು ತೀರ ಶುದ್ಧವಾಗಿ ತನ್ನ ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವುದರ ಪ್ರಯತ್ನದಲ್ಲಿ ಯಾವತ್ತೂ ತನ್ನನ್ನು ತೊಡಗಿಸಿಕೊಳ್ಳುತ್ತಿದ್ದ.. ‘ಈ ಬದುಕೆಂಬುದು ಸತ್ಯ- ಮಿಥ್ಯಗಳ, ಶುದ್ಧ- ಅಶುದ್ಧಗಳ, ಪ್ರಾಮಾಣಿಕತೆ- ಕೃತ್ರಿಮಗಳ ಸಂಗಮ. ಒಬ್ಬ ಕಾದಂಬರಿಕಾರ ಸತ್ಯ, ಶುದ್ಧ, ಪ್ರಾಮಾಣಿಕವಾದವುಗಳನ್ನು ಹೆಕ್ಕಿ, ಜೋಡಿಸಿ ದೈನಿಕವನ್ನು ಮೀರಿದ ಸುಂದರ ವಾಸ್ತವವನ್ನು ಸೃಷ್ಟಿಸಬೇಕು. ಇಂಥ ಶೋಧದಲ್ಲಿ ಮಾತ್ರ ನನಗೆ ಸುಖ ಸಿಗುವುದು’ ಎಂದು ಆತ ಬಹಳ ಬಾರಿ ಹೇಳಿದ್ದ. ಒಂದು ಉದಾಹರಣೆ ನೋಡಿ. ಆತನ ‘ಸ್ನೋ ಕಂಟ್ರಿ’ ಎಂಬ ಅದ್ಭುತ ಕಾದಂಬರಿಯ ಮೊದಲ ಅಧ್ಯಾಯದಲ್ಲಿ ನಾಯಕ ಶಿಮಮುರ ಜಪಾನಿನ ಉತ್ತರಭಾಗದಲ್ಲಿರುವ ಹಿಮಾಚ್ಛಾಧಿತ ಪ್ರದೇಶಕ್ಕೆ ಒಂದು ರೈಲಿನಲ್ಲಿ ಹೋಗುತ್ತಿರುತ್ತಾನೆ. ರೈಲಿನ ಇನ್ನೊಂದು ಮೂಲೆಯಲ್ಲಿ ಯೋಕೋ ಎಂಬ ಒಬ್ಬ ಸುಂದರ ಹುಡುಗಿ ತನ್ನ ರೋಗಿಷ್ಠ ಪ್ರಿಯತಮನ ಜತೆ ಕೂತಿದ್ದಾಳೆ. ಹೊರಗೆ ನಿಧಾನಕ್ಕೆ ಕತ್ತಲಾಗುತ್ತಿದೆ. ರೈಲು ನಿಧಾನವಾಗಿ ಈ ಹಿಮದ ಮಧ್ಯೆ ಹೋಗುತ್ತಾ ಇದೆ. ಆಗ ಆ ಪರ್ವತದ ಮೇಲಿನಿಂದ ಪ್ರತಿಫಲಿಸಿದ ಬೆಳಕಿನ ಕಿರಣದ ಹೊಳಪನ್ನು ಆ ಸುಂದರ ಹುಡುಗಿಯ ಕಣ್ಣಿನಲ್ಲಿ ಶಿಮಮುರ ರೈಲಿನ ಮಬ್ಬು ಗಾಜಿನ ಕಿಟಕಿಯಲ್ಲಿನ ಆ ಹುಡುಗಿಯ ಪ್ರತಿಬಿಂಬದಲ್ಲಿ ಕಾಣುತ್ತಾನೆ. ಇದು ಶಿಮಮುರನಿಗೆ ಅತ್ಯಂತ ಸುಂದರವಾದ ಅನುಭವ. ಹೊರಗೆ ಕೊರೆಗಟ್ಟುವ ಚಳಿ, ಎಲ್ಲೆಲ್ಲೂ ಹಿಮ, ಇದಲ್ಲದೆ ಈ ಸುಂದರ ಹುಡುಗಿ ಆರೈಸುತ್ತಿರುವುದು ಅಕೆಯ ರೋಗಗ್ರಸ್ತ ಗೆಳೆಯನನ್ನು. ಆತ ಅಲ್ಲಿಯೇ ತಳ್ಳುಕುರ್ಛಿಯಲ್ಲಿದ್ದಾನೆ. ಹೊರಗೆ ಕತ್ತಲಾಗುತ್ತಿದೆ, ಪ್ರಯಾಣದಿಂದ ಎಲ್ಲರೂ ಬಳಲಿದ್ದಾರೆ. ಕಿಟಕಿಯ ಗಾಜು ಕನ್ನಡಿಯಂತಲ್ಲ ಅದು ಯಾವ ಬಿಂಬವನ್ನೂ ಪೂರ್ತಾ ಪ್ರತಿಬಿಂಬಿಸಲಾರದು. ಮತ್ತೆ ಕತ್ತಲಿನ ಮಬ್ಬು ಬೆಳಕಿನಲ್ಲಿ ಈ ಹೊರಗಿನ ಕಿರಣ ಪರ್ವತದ ಮೇಲಿಂದ ಪ್ರತಿಫಲಿಸಿ, ಹುಡುಗಿಯ ಕಣ್ಣಲ್ಲಿ ಮಿಂಚುತ್ತಿದ್ದನ್ನು ನಾಯಕ ಶಿಮಮೂರ ಆಕೆಯ ಮಬ್ಬು ಬಿಂಬದಲ್ಲಿ ಕಾಣುತ್ತಾನೆ.- ಇಂಥ ಪ್ರತಿಮೆಗಳನ್ನು ಮರೆಯುವುದು ಕಷ್ಟ. ಕವಬಾಟನ ಸೌಂದರ್ಯದ ಶೋಧವೂ ಹೀಗೇ. ಶಿಮಮೂರನ ಇಡೀ ರೈಲಿನ ವ್ಯರ್ಥ ಪ್ರಯಾಣಕ್ಕೆ ಈ ಒಂದು ಬೆಳಕಿನ ಕಿರಣದ ಪ್ರತಿಫಲನದ ಸೌಂದರ್ಯ ಗೊತ್ತಿಲ್ಲದ ಸಾರ್ಥಕ್ಯವನ್ನು ಒದಗಿಸುತ್ತದೆ. ಇಂಥ ಸೌಂದರ್ಯವನ್ನು ಹುಡುಕುವುದು, ದಾಖಲಿಸುವುದು ಒಬ್ಬ ಕಾದಂಬರಿಕಾರನ ಗುರಿಯಾಗಬೇಕೆಂದು ಆತ ಯಾವತ್ತೂ ಪ್ರತಿಪಾzಸುತ್ತಿದ್ದ,

ಬದುಕನ್ನು ತೀವ್ರವಾಗಿ ಅನುಭವಿಸಬೇಕಾದಲ್ಲಿ ಅದಕ್ಕೆ ಬೇಕಾದದ್ದು ಮುಗ್ಧತೆ ಮತ್ತು ಮುಕ್ತತೆ ಎಂದು ಕವಬಾಟ ಎಂದಿಗೂ ನಂಬಿದ್ದ. ಇದು ಆತನ ಯಾವತ್ತೂ ಆಶಯ ಕೂಡ. ಈ ಮುಗ್ಧತೆಯನ್ನು ಆತ ಸಣ್ನ ಮಕ್ಕಳಲ್ಲಿ, ಎಳೆಯ ಪ್ರಾಯದ ತರುಣಿಯರಲ್ಲಿ ಮತ್ತು ಸಾಯುತ್ತಿರುವ ಗಂಡಸರಲ್ಲಿ ಕಂಡಿದ್ದ. ಹಾಗಾಗಿ ಆತನ ಪ್ರಸಿದ್ಧ ಕಾದಂಬರಿಗಳಲ್ಲಿ ಈ ಬಗೆಯ ಪಾತ್ರಗಳು ಪುನರಾವರ್ತಿತವಾಗುತ್ತವೆ. ಮಕ್ಕಳ ಮುಗ್ಧತೆಗೆ ಯಾರೂ ಕಾರಣ ಕೇಳುವುದಿಲ್ಲ. ಆದರೆ, ಎಳೆಯ ತರುಣಿಯರು ಮತ್ತು ಸಾಯುತ್ತಿರುವ ಗಂಡಸರಲ್ಲಿ ಇಂಥ ಮುಗ್ಧತೆಯನ್ನು ಆತ ಮತ್ತೆಮತ್ತೆ ಕಂಡಿದ್ದು ಕುತೂಹಲಕರವಾದ ವಿಷಯ. ಅಷ್ಟೇ ಅಲ್ಲ, ಈ ಮುಗ್ಧತೆಯಿಲ್ಲದ ಬರಹಗಾರರನ್ನಾಗಲೀ ಅಥವಾ ಅಂತಹ ಯಾವುದೇ ಬರವಣಿಗೆಯನ್ನೂ ಕವಬಾಟ ಒಪ್ಪಿಕೊಳ್ಳುತ್ತಿರಲಿಲ್ಲ. ಇದನ್ನು ಆತ ತನ್ನ ಸಾಹಿತ್ಯಿಕ ಜೀವನದಲ್ಲಿಯೂ ಯಾವತ್ತೂ ಒಂದು ವ್ರತದಂತೆ ಪಾಲಿಸಿದ. ವೃತ್ತಿಪರ ಬರಹಗಾರರನ್ನು ಆತ ಯಾವತ್ತೂ ಇಷ್ಟಪಟ್ಟಿರಲಿಲ್ಲ. ಹಾಗೆಯೇ ಏನೂ ಹೆಸರು ಮಾಡಿರದ ಹೊಸಬರಹಗಾರರನ್ನು ಆತ ಕೊಂಚ ಹೆಚ್ಚಾಗಿಯೇ ಓಲೈಸುತ್ತಿದ್ದ ಎಂಬ ಅಪವಾದವೂ ಇದೆ. ಆದರೆ, ಮಗುವಿನ ಮುಗ್ಶತೆಯಿಂದ ನೋಡಲಾಗದ ಜಗತ್ತನ್ನು ಆತ ಎಂದೂ ನಿರಾಕರಿಸಿದ್ದ. ಆತನ ಪ್ರಕಾರ ಮುಗ್ಧತೆಯೆಂದರೆ ಯಾರಿಗೂ ದಕ್ಕದ, ಯಾರಿಗೂ ದಕ್ಕಿರದ ಪ್ರೀತಿ.

ತನ್ನ ಸಾಹಿತ್ಯ ಮತ್ತು ಅದರ ಆಶಯದ ಬಗ್ಗೆ ಕವಬಾಟ ಯಾವತ್ತೂ ಸ್ಪಷ್ಟವಾಗಿದ್ದ. ಅದರ ಬಗ್ಗೆ ಆತನಿಗೆ ಕೊಂಚವೂ ಅನುಮಾನವಿರಲಿಲ್ಲ. ಪ್ರತಿಯೊಂದು ಕ್ರಿಯೆಯೂ ಕೇವಲ ಸಾಂದರ್ಭಿಕ ಮಾತ್ರ ಎಂದು ಆತ ಬಹಳವಾಗಿ ನಂಬಿದ್ದ. ಒಳ್ಳೆಯದಕ್ಕೆ ಅರ್ಥ ಬರಬೇಕಾದರೆ ಈ ಒಳ್ಳೆಯತನವನ್ನು ಸುತ್ತುವರಿಯುವ ಸಂದರ್ಭ ಮಾತ್ರ ಮುಖ್ಯ, ಹಾಗೆಯೇ ಕೆಟ್ಟದೆನ್ನುವುದು ಕೆಟ್ಟದಾಗುವುದು ಕೂಡ ಆ ಸಂದರ್ಭಾನುಸಾರ ಮಾತ್ರ. ಯಾವುದೇ ಕ್ರಿಯೆಯನ್ನು ಆ ಕ್ರಿಯೆಯ ಸಾಂದರ್ಭಿಕ ಅರ್ಥದಿಂದ ಹೊರತುಪಡಿಸಿ ಆತ ನೋಡಲು ಇಷ್ಟಪಡುತ್ತಿರಲಿಲ್ಲ.ಒಂದು ಸಣ್ನ ಉದಾಹರಣೆ ಕೊಡಬೇಕೆಂದರೆ ಜಪಾನಿನ ಒಬ್ಬ ದೂರದ ಓಟಗಾರ ೧೯೬೮ರಲ್ಲಿ ಒಂದು ಹೋಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ. ಆತ ತನ್ನ ಆತ್ಮಹತ್ಯಾ ಒಕ್ಕಣೆಯಲ್ಲಿ ‘ನನ್ನ ಪ್ರೀತಿಯ ಅಪ್ಪ, ಅಮ್ಮ- ನೀವು ಬಡಿಸಿದ ಟ್ಯೊರೊರೋ ಅನ್ನವನ್ನು ನಾನು ಬಹಳ ಖುಷಿಯಿಂದ ಉಂಡಿದ್ದೇನೆ’ ಎಂದು ಆರಂಭಿಸಿ ತನ್ನ ಇಡೀ ಪರಿವಾರವನ್ನು ಉದ್ದೇಶಿಸಿ ಧನ್ಯವಾದವನ್ನು ಹೇಳಿ ಕೊನೆಗೆ ಎಲ್ಲರ ಕ್ಷಮೆ ಕೇಳಿ ಸಾಯುತ್ತಾನೆ. ಈ ಆತ್ಮಹತ್ಯಾ ಪತ್ರ ಕವಬಾಟನನ್ನು ಬಹಳ ಕಾಡಿತ್ತು. ‘ಈ ಅತಿಭಾವುಕ ಅನ್ನುವ ಪತ್ರದಲ್ಲಿ ಈತ ತೀರ ಸರಳವಾಗಿ ನಾನು ಖುಷಿಪಟ್ಟಿದ್ದೇನೆ ಎಂದು ಹೇಳಿಕೊಳ್ಳುವ ಈ ಪದಗಳು ಆತ ಬದುಕಿದ ಅಪ್ಪಟ ಬದುಕನ್ನು ಉಸಿರಿಸುತ್ತದೆ. ಆತ್ಮಹತ್ಯಾ ಒಕ್ಕಣೆಯ ಅರ್ಥವನ್ನು ಮೀರಿಸುವ ಒಂದು ತಾಳ ಈ ಪದಗಳಿಗಿವೆ. ಎಷ್ಟು ಸುಂದರ, ಗಾಢ ಮತ್ತು ವಿಷಾದಕರ.’ ಎಂದು ಕವಬಾಟ ಹೇಳಿದ್ದ. ಈ ರೀತಿಯ ಸೌಂದರ್ಯ ಮತ್ತು ವಿಷಾದ ತುಂಬಿದ ಬರವಣಿಗೆಗೆ ಕವಬಾಟ ಹಾತೊರೆಯುತ್ತಿದ್ದ ಎನ್ನುವುದು ಅವನ ಕಾದಂಬರಿಗಳನ್ನು ಓದಿದವರಿಗೆ ಸ್ಪಷ್ಟವಾಗುತ್ತದೆ.

ಈತನ ಸಾವೂ ಒಂದು ವಿಚಿತ್ರಕರವಾಗಿಯೇ ಆಯಿತೆಂದು ಹೇಳಲಾಗುತ್ತದೆ. ಈತನ ಆತ್ಮ ಸ್ನೇಹಿತ ಯುಕಿಯೋ ಮಿಶಿಮಾ ಎಂಬ ಲೇಖಕ ೧೯೭೦ರಲ್ಲಿ ವಿಧಿವತ್ತಾಗಿ ಆತ್ಮಹತ್ಯೆಯನ್ನು ಮಾಡಿಕೊಂಡ. ೧೯೭೨ರಲ್ಲಿ ಯಾವ ಸೂಚನೆಯನ್ನೂ ಕೊಡದೆ ಮನೆಯಿಂದ ಹೊರಹೋದ ಕವಬಾಟ ಒಂದು ಗ್ಯಾಸ್ ನಳಿಕೆಯನ್ನು ಬಾಯಲ್ಲಿಟ್ಟುಕೊಂಡು ಸತ್ತ. ಆತ ಯಾಕೆ ಸತ್ತ ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ನೋಬೆಲ್ ಸಮಿತಿಯ ವೆಬ್‌ಸೈಟಿನಲ್ಲಿ ಈತನ ಮರಣ ಆತ್ಮಹತ್ಯೆಯಿಂದಲೇ ಆಯಿತು ಎಂದು ಬರೆಯಲಾಗಿದೆ.

ಕವಬಾಟ ಅನೇಕ ಕಾದಂಬರಿಗಳನ್ನು, ಕಥೆಗಳನ್ನು ಮತ್ತು ಅನೇಕ ಸಣ್ಣ ಸಣ್ಣ ಕತೆಗಳನ್ನೂ ಕೂಡ ಅಪೂರ್ಣವಾಗಿಯೇ ಉಳಿಸಿದ್ದ. ‘ಕಲೆ ಅದಾಗಿಯೇ ಪರಿಪೂರ್ಣವಾಗಬೇಕು’ ಎಂಬುದು ಆತನ ನಂಬಿಕೆ. ಅದಕ್ಕೆ ಒಂದು ಸಮಯದ ಪರಿಧಿಯನ್ನು ಹಾಕಿಟ್ಟುಕೊಂಡು ಇಷ್ಟುದಿನದೊಳಗೆ ಒಂದು ಕಾದಂಬರಿಯನ್ನು ಮುಗಿಸುತ್ತೇನೆ ಎಂಬುದರ ಬಗ್ಗೆ ಆತನಿಗೆ ನಂಬಿಕೆಯಿರಲಿಲ್ಲ. ಆತನ ಬಹು ಮುಖ್ಯ ಕಾದಂಬರಿಗಳೆಂದು ಗುರುತಿಸಲಾಗುವ ‘ಸ್ನೋ ಕಂಟ್ರಿ’ ಮತ್ತು ‘ಥೌಸೆಂಡ್ ಕ್ರೇನ್ಸ್’ ಅನ್ನು ಆತ ವರ್ಷಾನುಗಟ್ಟಲೆ ಬರೆದ.

ಈತನ ಒಂದು ಬಹುಮುಖ್ಯ ಕಾದಂಬರಿ ‘ಥೌಸೆಂಡ್ ಕ್ರೇನ್ಸ್’ ಅನ್ನು ಕನ್ನಡಕ್ಕೆ ‘ಸಾವಿರ ಪಕ್ಷಿಗಳು’ ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ, ಕೃಷ್ಣರಾಜುರವರು. ಕವಬಾಟನ ಈ ಅತ್ಯಂತ ಸೋಪಜ್ಞ ಕೃತಿಯನ್ನು ಅಷ್ಟೇ ಸಮರ್ಥವಾಗಿ ಕನ್ನಡಕ್ಕೆ ಅನುವಾದಿಸಿ ನಮಗೆಲ್ಲ ಈತನ ಬರವಣಿಗೆಯ, ಭಾಷೆಯ ಮತ್ತು ಈತ ಬದುಕುತ್ತಿದ್ದ ಪ್ರಪಂಚವನ್ನು ನಮಗೆ ಪರಿಚಯಿಸಿದ್ದಾರೆ ಕೃಷ್ಣರಾಜುರವರು. ಎಷ್ಟು ಓದಿದರೂ ಇನ್ನೂ ಓದಬೇಕೆನ್ನಿಸುವ ಈ ಮಹಾಕಾದಂಬರಿಕಾರನನ್ನು ಕನ್ನಡಕ್ಕೆ ಪರಿಚಯಮಾಡಿಸಿದ್ದಕ್ಕಾಗಿ ನಾನು ಕೃಷ್ಣರಾಜುರವರಿಗೆ ಧನ್ಯವಾದವನ್ನು ಹೇಳುತ್ತೇನೆ.
ಕಾದಂಬರಿಯ ಕಥನವಸ್ತುವನ್ನು, ಭಾಷೆಯನ್ನು ನಾನು ಚರ್ಚಿಸಲು ಹೋದರೆ ಕಾದಂಬರಿಕಾರನಿಗೆ ಮತ್ತು ಅನುವಾದಕರ ಪ್ರಯತ್ನಕ್ಕೆ ಯಾವರೀತಿಯಲ್ಲಿಯೂ ನ್ಯಾಯ ಒದಗಿಸಲಾರೆ. ಅನುವಾದಕನ ಜಾಣ್ಮೆ ಮತ್ತು ಮೂಲಕೃತಿಯ ಬಗೆಗಿನ ನಿಷ್ಟೆ, ಕಾಳಜಿಗಳು ಅನುವಾದದಲ್ಲಿ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಈ ಒಂದು ಸಣ್ಣ ಉದಹರಣೆಯನ್ನು ನೋಡಿ.
ಕಾದಂಬರಿಯ ಮೊದಲಲ್ಲಿಯೇ ನಾಯಕ ಕಿಕುಜಿಯ ತಂದೆಯ ಪ್ರೇಯಸಿ ಚಿಕಕೋಳ ಮೊಲೆಯ ಮೇಲಿನ ಮಚ್ಚೆಯೊಂದರ ವಿವರಣೆ ಬರುತ್ತದೆ. ಅದರ ಅನುವಾದ ಹೀಗಿದೆ.
‘ಅದನ್ನು ಓದುತ್ತಾ ಕಿಕುಜಿಗೆ ಚಿಕಕೊಳ ಮೊಲೆಯ ಮೇಲಿನ ಮಚ್ಚೆ ನೆನಪಿಗೆ ಬಂತು.
ಅವನಿಗಾಗ ಎಂಟೋ ಒಂಬತ್ತೋ ವರ್ಷ. ಅಪ್ಪನೊಟ್ಟಿಗೆ ಅವಳ ಮನೆಗೆ ಹೋಗಿದ್ದ. ಅಡಿಗೆಮನೆಯಲ್ಲಿ ಮಂಡಿಯೂರಿ ಕುಳಿತಿದ್ದಳು. ಎದುರಿಗೆ ಹರಡಿದ ನ್ಯೂಸ್ ಪೇಪರ್. ಕಿಮೋನೋ ಸರಿದು ಬತ್ತಲೆ ಮೊಲೆ ಮುಂದೆ ಜೋತಿದೆ. ಎಡ ಮೊಲೆಯ ಮೇಲಿಂದ ನಡುವಿನ ಕಣಿವೆಯವರೆಗೆ ಹಬ್ಬಿದ ಕೈ-ಅಗಲದ ಕೆನ್ನೀಲಿ ಮಚ್ಚೆ. ಅದರ ಮೇಲೆ ತೆಳುವಾಗಿ ಬೆಳೆದಿದ್ದ ಕೂದಲುಗಳನ್ನು ಸಣ್ಣ ಕತ್ತರಿಯಿಂದ ಕತ್ತರಿಸುತ್ತಿದ್ದಾಳೆ...
...ಅವಳ ಮಂಡಿಯ ಮುಂದಿನ ಪೇಪರಿನ ಮೇಲೆ ಬಿದ್ದಿದ್ದ ಗರಿ ಗರಿ, ನಿಮಿರು ನಿಮಿರಿನ ಕೂದಲನ್ನು ಕಿಕುಜಿ ದುರುಗುಟ್ಟಿ ನೋಡಿದ.’
...ಆ ಮಗು ತನ್ನ ಜೀವನದಲ್ಲಿ ಮೊಟ್ಟ ಮೊದಲು ನೋಡೋದು ಅಮ್ಮನ ಮಚ್ಚೆ ಹರಡಿದ ಮೊಲೆ. ಅದರ ಮೂಲಕಾನೇ ಮಗುಗೆ ಅದರಮ್ಮನ ನೆನಪು. ಜನ್ಮದುದ್ದಕ್ಕೂ ಆ ಕುರೂಪಿ ಮೊಲೇನ ಮರೆಯೋಕಾಗಲ್ಲ,
ಚಿಕಕೊಳ ಮೊಲೆಯ ಮೇಲಿನ ಮಚ್ಚೆಯ ಈ ಪ್ರತಿಮೆಯನ್ನು ಕಣ್ಣಿನಿಂದ ಅಳಿಸಲು ಪ್ರಯತ್ನ ಮಾಡಿನೋಡಿ. ಅಷ್ಟೇ ಅಲ್ಲ, ಕಣ್ಣು ಬಿಟ್ಟ ತಕ್ಷಣ ಮೊಲೆಯ ಮೇಲಿನ ಮಚ್ಚೆಯನ್ನು ನೋಡುವ ಮಗುವಿನ ಪ್ರತಿಮೆ. ಎರಡೂ ಕೊನೆಯವರೆಗೂ ಏನು, ಕಾದಂಬರಿಯೋದಿಯಾದ ಮೇಲೆಯೂ ಕಣ್ಣಮುಂದೆ ದಟ್ಟವಾಗಿ ಉಳಿಯುವುದರಲ್ಲಿ ಆಶ್ಚರ್ಯವಿಲ್ಲ.

* * *

ಈ ಅನುವಾದಕ್ಕೆ ಕೃಷ್ಣರಾಜುರವರು ಉಪಯೋಗಿಸಿರುವ ಭಾಷೆ ಸಮಕಾಲೀನ ಕನ್ನಡದ ಓದುಗ ಆಡುನುಡಿಯಲ್ಲಿ ಬಳಸುವಂಥದ್ದು. ಯಾವುದೇ ಗ್ರಾಂಥಿಕ ನುಡಿಗಟ್ಟನ್ನಾಗಲೀ ಅಥವಾ ಪಾಂಡಿತ್ಯಪೂರ್ಣತೆಗಾಗಲೀ ಅವರು ತಲೆಕೆಡಿಸಿಕೊಂಡಿಲ್ಲ. ನಡುವೆ ಬೇಕಾಗಿಯೇ ಕೆಲವು ಇಂಗ್ಲಿಷ್ ಪದಗಳನ್ನೂ ಉಪಯೋಗಿಸುತ್ತಾರೆ॒

ಸರಳತೆ ಅವಶ್ಯವಾಗಿದ್ದಾಗ ಈ ರೀತಿಯ ಅನುವಾದದ ಅಗತ್ಯ ಎಷ್ಟಿದೆ ಅಂದು ನನಗೆ ಅರ್ಥವಾದದ್ದು ಒ ಎಲ್ ನಾಗಭೂಷಣಸ್ವಾಮಿಯವರ ಟಾಲ್‌ಸ್ಟಾಯ್ ಕಥೆಗಳು, ವಾರ್ ಅಂಡ್ ಪೀಸ್‌ನ ಕೆಲವು ಅಧ್ಯಾಯಗಳು ಮತ್ತು ರಿಲ್ಕೆಯ ಪತ್ರಗಳ ಅನುವಾದಗಳನ್ನು ಓದಿದಾಗ. ಟಾಲ್‌ಸ್ಟಾಯ್ ಕತೆಗಳಲ್ಲಿ ಹಾರಿಬಲ್, ಈಡಿಯಟ್ಟು, ಇಂಥ ಪದಗಳನ್ನು ಬಳಸಿದಾಗ ಒಂದು ರೀತಿ ಪುಳಕವಾಗಿ ಟಾಲ್‌ಸ್ಟಾಯ್‌ನ ಇನ್ನೊಂದು ಮುಖದ ಪರಿಚಯವಾದಂತೆ ಆಗಿ, ಟಾಲ್‌ಸ್ಟಾಯ್ ಅನ್ನು ಹೀಗೂ ಓದಿಕೊಳ್ಳಬಹುದು ಎಂದನಿಸಿತ್ತು. ಈ ಮಹಾಕಾದಂಬರಿಗಳು ತಮ್ಮನ್ನು ತಮ್ಮ ಲೋಕಕ್ಕೆ ಬೇರೆಯೇ ಬಾಗಿಲಿನ ಮೂಲಕ ಪ್ರವೇಶ ದೊರಕಿಸಿಕೊಳ್ಳುತ್ತವೆ. ಇದು ಅನುವಾದಕನ ಓದು, ಎರಡೂ ಭಾಶೆಗಳ ಮೇಲೆ ಇರುವ ಪರಿಣಿತಿ ಮತ್ತು ಈ ರೀತಿಯ ಅನುವಾದ ಮುಟ್ಟಬೇಕಾಗಿರುವ ‘ಟಾರ್ಗೆಟ್’ ಓದುಗರು- ಎಲ್ಲದರ ಬಗೆಗಿನ ಕಾಳಜಿಯನ್ನೂ ತೋರುತ್ತದೆ. ಈ ‘ಅನುವು ಆಗುವ’ ಕ್ರಿಯೆಯಲ್ಲಿ ನಮ್ಮ ಕಾಲದ ಕಾಳಜಿಗಳು ನಮಗೆ ಗೊತ್ತಿಲ್ಲದೇ ಕೆಲಸ ಮಾಡಿರುತ್ತವೆ.

ನನಗೆ ತಿಳಿದ ಮಟ್ಟಿಗೆ ಕನ್ನಡ ಕಾದಂಬರಿ ಲೋಕಕ್ಕೆ ಇದು ಮೊಟ್ಟ ಮೊದಲ ಜಪಾನೀ ಭಾಷೆಯ ಕಾದಂಬರಿಯ ಅನುವಾದ. ತಪ್ಪದೇ ಓದಲೇಬೇಕಾದ ಕೃತಿ.
(ಮುನ್ನುಡಿಯಿಂದ)

Friday, November 13, 2009

ಐ ಲವ್ ಯು, ಮ್ಯಾನ್

ಕೆಲವು ದಿನಗಳ ಹಿಂದೆ ವಿಮಾನದಲ್ಲಿ ಪ್ರಯಾಣಮಾಡುತ್ತಿದ್ದಾಗ ಒಂದು ಸಿನೆಮಾ ನೋಡಿದೆ. ಹೆಸರು ‘ಐ ಲವ್ ಯು, ಮ್ಯಾನ್.’ ಹಾಲಿವುಡ್ಡಿನ ರೊಮ್ಯಾಂಟಿಕ್ ಕಾಮಿಡಿಯೆಂದು ಕರೆಸಿಕೊಳ್ಳುವ ಈ ಸಿನೆಮಾದ ಪಾತ್ರಗಳು, ಅವುಗಳ ನಟನೆ ಮತ್ತು ಇಡೀ ಚಿತ್ರದ ಪ್ಲಾಟ್ ಕೂಡ ಬರೇ ಹಸಿಹಸಿಯಾಗಿತ್ತೆಂದು ಹೇಳಿ ಆ ಚಿತ್ರವನ್ನು ಬದಿಗಿಡಬಹುದಾಗಿತ್ತು. ಆದರೆ, ನಾಗರಿಕತೆಯ ಹೊಡೆತಕ್ಕೆ ಸಿಕ್ಕಿ ಗೊಂದಲದ ಗೂಡಾಗಿರುವ ನಮ್ಮ ಸಂಬಂಧಗಳ ಮತ್ತೊಂದು ಆಯಾಮವನ್ನು ಇಂಥ ಬಿ ಗ್ರೇಡ್ ಹಾಲಿವುಡ್ ಚಿತ್ರವೂ ಹೇಗೆ ಒರೆಗೆ ಹಚ್ಚುತ್ತದೆ ಎಂದು ಚಿತ್ರವನ್ನು ನೋಡಿದ ಮಲೆ ಕೊಂಚ ಸೋಜಿಗವಾಯಿತು.

ಮೊದಲೇ ಹೇಳಿದ ಹಾಗ ಇದೊಂದು ಹಾಲಿವುಡ್ಡಿನ ರೊಮ್ಯಾಂಟಿಕ್ ಕಾಮಿಡಿ. ವಿಮಾನದಲ್ಲಿ ಕಾಲಿರಿಕಿಸಿಕೊಂಡು ಕೂರಲಾಗದ ಕುರ್ಚಿಯಲ್ಲಿ ಕೂತು, ಐಫೋನಿನ ಸ್ಕ್ರೀನಿಗಿಂತಾ ಕೆಲವೊಂದು ಇಂಚು ದೊಡ್ದದಾಗಿರುವ ಮಾನಿಟರ‍್ನಲ್ಲಿ, ಇಯರ‍್ಫೋನುಗಳ ಮೂಲಕ ಯಾವ ಚಿತ್ರವನ್ನು ಆಸ್ವಾದಿಸುವುದಕ್ಕಂತೂ ಸಾಧ್ಯವಿಲ್ಲ. ನೋಡಬಹುದಷ್ಟೆ. ಹಾಗೆ ನೋಡಿದಾಗಲೂ ಈ ಚಿತ್ರ ಗಮನ ಸೆಳೆಯಲು ಕಾರಣವೇನು? ಗಮನಸೆಳೆಯುವುದು ಅನ್ನುವುದಕ್ಕಿಂತಾ ಹೀಗೆ ಒಂದು ಲೇಖನ ಬರೆಯುವುದಕ್ಕೆ ವಸ್ತುವನ್ನು ಕೊಡುವಂತಹ ಚಿತ್ರವಾ ಇದು ಎಂದು ಹಲವು ಅನುಮಾನಗಳ ನಡುವೆಯೇ ಬರೆಯುತ್ತಿದ್ದೇನೆ.

ಚಿತ್ರದ ಕತೆ ಬಹಳ ಸರಳ. ನಾಯಕ, ನಾಯಕಿಗೆ ಮದುವೆ ನಿಶ್ಚಯವಾಗಿರುತ್ತದೆ. ನಾಯಕಿ ತನ್ನ ಸಂತೋಷವನ್ನು ತನ್ನ ಗೆಳತಿಯರೊಡನೆ ಹೇಳಿಕೊಂಡು ತಿರುಗುತ್ತಾಳೆ ಮದುವೆಯಲ್ಲಿ, ಬ್ರೈಡ್ಸ್‌ಮೈಡ್ ಯಾರು, ರಿಂಗ್ ಬೇರರ್ ಯಾರು, ಮತ್ತಿನ್ಯಾರ‍್ಯಾರು ಇನ್ನೇನು ಕೆಲಸ ಮಾಡಬೇಕೆಂದು ಎಲ್ಲ ವಹಿಸಿಕೊಟ್ಟು ಸಂಭ್ರಮಿಸುತ್ತಾ ಇರುತ್ತಾಳೆ.

ಆದರೆ ಸಮಸ್ಯೆಯಿರುವುದು ನಮ್ಮ ನಾಯಕನಿಗೆ. ಆತನಿಗೆ ಒಬ್ಬನೇ ಒಬ್ಬನೂ ಸ್ನೇಹಿತನಿಲ್ಲ. ತನ್ನ ಮದುವೆಯ ಸಂಭ್ರಮವನ್ನು ಹೇಳಿಕೊಂಡು ಖುಷಿಪಡಲು ಯಾರೂ ಜತೆಗಿಲ್ಲ. ಕಡೆಯಪಕ್ಷ ತನ್ನ ಮದುವೆಗೆ ಬೆಸ್ಟ್‌ಮ್ಯಾನ್ ಆಗಲೂ ಆತನಿಗೆ ಯಾರೂ ಗೆಳೆಯರಿಲ್ಲ. ಆದರೆ ತನಗೆ ಯಾರೂ ಸ್ನೇಹಿತರೇ ಇಲ್ಲವೆಂಬ ಅರಿವು ಕೂಡ ಆಗುವುದು ಅವನ ಮದುವೆ ಗೊತ್ತಾದ ಮೇಲೆಯೇ. ಮದುವೆಯ ದಿನದ ಮುಂಚೆ ಯಾರಾದರೂ ಒಬ್ಬನನ್ನಾದರೂ ಗಂಡಸನ್ನು ಸ್ನೇಹಿತನನ್ನಾಗಿ ಜತೆಮಾಡಿಕೊಳ್ಳಬೇಕು ಎನ್ನುವ ಹಠಕ್ಕೆ ಬಿದ್ದು ತನ್ನ ತಮ್ಮನ ಸಹಾಯ ಪಡಕೊಂಡು ತನಗೆ ಸ್ನೇಹಿತನೊಬ್ಬನನ್ನು ಹುಡುಕುತ್ತಾ ಹೋಗುತ್ತಾನೆ.

ಹೀಗೆ ಒಬ್ಬ ಗಂಡು ಇನ್ನೊಬ್ಬ ಗಂಡನ್ನು ಬರೇ ಸ್ನೇಹಿತನಾಗಿ ಪಡೆಯುವುದು ಈ ನಾಗರಿಕ ಸಮಾಜದಲ್ಲಿ ಎಷ್ಟು ಕಷ್ಟ ಎಂಬುದೇ ಚಿತ್ರದ ಕಥೆ. ನಾಯಕಿಯೂ ನಾಯಕನಿಗೆ ಹೋಗಿ ಒಬ್ಬ ಗಂಡು ಗೆಳೆಯನನ್ನು ಗುರುತುಮಾಡಿಕೊ ಎಂದು ದುಂಬಾಲುಬಿದ್ದನಂತರ ಮುಂದೆ ನಡೆಯುವುದೆಲ್ಲ ಪ್ರಹಸನಗಳು. ಮೊದಲು ಈತ ಯಾರೋ ಒಬ್ಬನನ್ನು ಭೇಟಿಮಾಡಿ ಆತನನ್ನು ರಾತ್ರಿ ಡಿನ್ನರಿಗೆಂದು ಕರಕೊಂಡು ಹೋಗುತ್ತಾನೆ. ವೈನು, ಡೈನಿನ ನಂತರ ಆ ಹೊಸ ಗೆಳೆಯ ಈ ತಮ್ಮ ಗೆಳೆತನಕ್ಕೆ ಬೇರೇನೋ ಆಯಾಮವನ್ನೇ ಹುಡುಕುತ್ತಾನೆ. ಗೆಳೆಯ ಪ್ರಿಯತಮನಾಗುತ್ತಾನೆ. ಮ್ಯಾನ್ ಡೇಟ್ ಅಲ್ಲಿಗೆ ಮುರಿದುಬೀಳುತ್ತದೆ.

ನಂತರ ಕೆಲವೊಂದು ಕ್ಲೀಶೆ ಎನ್ನುವ ನಿಯಮಗಳನ್ನು ಹಾಕಿಕೊಂಡು ತನ್ನ ಮೇಲೆ ಯಾವ ಲೈಂಗಿಕಾಕರ್ಷಣೆಯಿಲ್ಲದೇ ಬರೇ ಗೆಳೆಯನಾಗಿ ಉಳಿಯಬಲ್ಲ ಗೆಳೆಯನನ್ನು ಮಾತ್ರ ಹುಡುಕಲೆಂದು ಆತ ಪ್ರಯತ್ನ ಮಾಡುತ್ತಾನೆ. ಹಾಗೆ ಹುಡಕೊಂಡ ಗೆಳೆಯನನ್ನು ‘ಐ ಲವ್ ಯು, ಮ್ಯಾನ್’ ಎಂದು ಸಂಭೋದಿಸುವ ಧೈರ್ಯ ಮಾಡುತ್ತಾನೆ.

* * *

ನನ್ನ ಕೆಲಸದಲ್ಲಿ ನಾನು ಹೆಣ್ಣು ಗಂಡಿನ ಬೇಧವಿಲ್ಲದೇ ವೈದ್ಯಕೀಯ ಕಾರಣಕ್ಕಾಗಿ ರೋಗಿಗಳನ್ನು ಮೇಲಿಂದ ಕೆಳಗೆ ಬಟ್ಟೆ ಬಿಚ್ಚಿಸಿ ಪರೀಕ್ಷೆ ಮಾಡುತ್ತೇವೆ. ಹತ್ತುವರ್ಷಗಳ ಹಿಂದೆ ನಾನು ರೆಸಿಡೆನ್ಸಿ ಮಾಡುತ್ತಿರಬೇಕಾದರೆ ‘ಒಬ್ಬ ಗಂಡು ಡಾಕ್ಟರು ಹೆಣ್ಣು ರೋಗಿಯನ್ನು ಪರೀಕ್ಷೆ ಮಾಡಬೇಕಾದರೆ ಪರೀಕ್ಷಾ ಕೊಠಡಿಯಲ್ಲಿ ಇನ್ನೊಬ್ಬ ಹೆಂಗಸು ಇರುವುದು ಆ ಹೆಣ್ಣು ರೋಗಿಗೆ ಸಾಂತ್ವನವನ್ನು ಕೊಡುತ್ತದೆ ಮತ್ತೆ ಪರೀಕ್ಷೆ ಮಾಡುವ ಗಂಡು ವೈದ್ಯನಿಗೂ ಕೊಂಚ ಮುಜುಗರ ಕಡಿಮೆಯಾಗುತ್ತದೆ’ ಎಂಬ ನಂಬಿಕೆಯಿಂದ ಹೆಣ್ಣು ರೋಗಿಗಳಿಗೆ ಹೆಣ್ಣು ನರ್ಸನ್ನು ಶ್ಯಾಪರೋನ್ ಆಗಿ ಬಳಸುತ್ತಿದ್ದೆವು. ಇದು ಒಂದು ರೀತಿಯ ವೈದ್ಯಕೀಯ ರಂಗದಲ್ಲಿ ಇನ್ನೂ ನಡೆದುಬಂದಿರುವ ಸಂಪ್ರದಾಯ. ಆದರೆ, ಈಗ ಕಳೆದ ಒಂದೈದು ವರ್ಷಗಳಲ್ಲಿ ನನಗೆ ಗೊತ್ತಿಲ್ಲದೇ ಆಗಿರುವ ಬೆಳವಣಿಗೆಯೆಂದರೆ ಗಂಡಸರು ರೋಗಿಗಳಿಗೂ ನಾನು ಹರ್ನಿಯಾ ಪರೀಕ್ಷೆ ಮಾಡಬೇಕಾದರೆ ಅಥವಾ ಯಾವುದೇ ಗುಪ್ತಾಂಗಗಳ ಪರೀಕ್ಷೆ ಮಾಡಬೇಕಾದರೂ ಪರೀಕ್ಷಾ ಕೊಠಡಿಯಲ್ಲಿ ಇನ್ನೊಬ್ಬ ವ್ಯಕ್ತಿ ಇದ್ದೇ ಇರುತ್ತದೆ. ಈ ವ್ಯಕ್ತಿ ಗಂಡಸೂ ಆಗಿರಬಹುದು, ಹೆಂಗಸೂ ಆಗಿರಬಹುದು. ಸಂಕೋಚ ಅಥವಾ ಖಾಸಗೀತನಗಳು ಲಿಂಗ ಪರಿಧಿಗಳನ್ನು ಮೀರಿದೆ. ಗಂಡು ಗಂಡನ್ನು ಪರೀಕ್ಷೆ ಮಾಡಲಿ, ಹೆಣ್ಣು ಹೆಣ್ಣನ್ನು ಪರೀಕ್ಷೆ ಮಾಡಲಿ ಯಾವಾಗ ಪ್ರೈವೆಸಿಯ ಲಗ್ಗೆ ಮೀರುತ್ತದೋ ಅಲ್ಲಿ ಇನ್ನೊಬ್ಬ ವ್ಯಕ್ತಿ- ರೋಗಿಗೂ ವೈದ್ಯನಿಗೂ ಸಾಕ್ಷಿಯಾಗಿ ನಿಲ್ಲಬೇಕಾಗುತ್ತದೆ.

ಆದರೆ, ಇಲ್ಲಿ ನಾವು ನಮಗೆ ಸಾಕ್ಷಿಗಳನ್ನು, ಶ್ಯಾಪರೋನ್‌ಗಳನ್ನು ಬಳಸುವುದು ಯಾರು ಯಾರಿಗೂ ಸಾಂತ್ವನ ಕೊಡಬೇಕಾಗುವ ಕಾರಣಕ್ಕಲ್ಲ ಎನ್ನುವುದು ವಿಷಾದದ ಸಂಗತಿ. ಇಲ್ಲಿ ಈ ವ್ಯಕ್ತಿ ನಾನು ನನ್ನ ಕೆಲಸವನ್ನು ಸರಿಯಾಗಿ ಮಾಡುತ್ತಿದ್ದೀನಾ ಇಲ್ಲವಾ ಎನ್ನುವುದನು ಗಮನಿಸಲು ಮಾತ್ರ ಕಾವಲು ನಿಂತಿರುತ್ತಾನೆ. ಇನ್ನೂ ಸರಿಯಾಗಿ ಹೇಳಬೇಕೆಂದರೆ ನಾನು ಪರೀಕ್ಷೆ ಮಾಡುವ ರೋಗಿ ನಾಳೆ ಈ ವೈದ್ಯ ಅನವಶ್ಯಕವಾಗಿ ನನ್ನ ಮೇಲೆ ಕೈಯಾಡಿಸಿದ ಎಂದು ಕೋರ್ಟಿನಲ್ಲಿ ಕೇಸುಹಾಕಿದಲ್ಲಿ ‘ಅದು ಹಾಗಲ್ಲ. ಈ ವೈದ್ಯ ಮಾಡಿದ್ದು ಎಲ್ಲವೂ ವೈದ್ಯಕೀಯ ಪರೀಕ್ಷೆಯ ಪರಿಮಿತಿಯಿಒಳಗೇ ಇತ್ತು ಎಂದು ನನ್ನನ್ನು ಕೆಲವೊಂದು ಪುಂಡ ರೋಗಿಗಳಿಂದ ಕಾಪಾಡಲು ಮಾತ್ರ ನಿಂತಿರುತ್ತಾರೆ. ಇದು ವೈಸವರ್ಸಾ ಕೂಡ. ಕೆಲ ಪುಂಡ ಡಾಕ್ಟರುಗಳೂ ಇರುತ್ತಾರಲ್ಲವಾ?

ಹೆಂಗಸರು ‘ನನಗೆ ಲೇಡಿ ಡಾಕ್ಟರು ಬೇಕು’ ಎಂದು ಕೇಳಿದರೆ, ಆ ವಾಕ್ಯ ಅರ್ಥವನ್ನೇ ಕಳಕೊಂಡಿದೆ.

* * *

ಈ ಬಾರಿಯ ನೀನಾಸಮ್ ಶಿಬಿರದಲ್ಲಿ ತಿರುಗಾಟದ ನಾಟಕ ‘ವೆನಿಸಿನ ವ್ಯಾಪಾರ’ ದಲ್ಲಿ ಮುಖ್ಯಪಾತ್ರಗಳಾದ ಆಂಟೋನಿಯೋ ಮತ್ತು ಬೆಸಿನಿಯೋ ಮಧ್ಯೆ ಸಲಿಂಗ ಸಂಬಂಧ ಇರಬಹುದು ಎಂಬ ಒಂದು ಅಂಶವನ್ನು ನಾಟಕದಲ್ಲಿ ಸೂಚ್ಯವಾಗಿ ತೋರಿಸಿದ್ದು ಮಾರನೆಯ ದಿನ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಶೇಕ್ಸ್‌ಪಿಯರನ ಕಾಲದಲ್ಲಿ ಸಲಿಂಗ ಸ್ನೇಹ, ಕಾಮ ಶಿಕ್ಷಾರ್ಹ ಅಪರಾಧವಾಗಿದ್ದರಿಂದ ಶೇಕ್ಸ್‌ಪಿಯರಿನ ನಾಟಕದ ಪಠ್ಯವನ್ನು ಈ ರೀತಿ ಅರ್ಥೈಸುವುದು,ವಿರೂಪಗೊಳಿಸುವುದು ತಪ್ಪು ಎಂಬ ಅಭಿಪ್ರಾಯವೂ ಅಲ್ಲಿ ಬಂತು. ಇದೇ ನಾಟಕವನ್ನು ಆಧರಿಸಿ ೨೦೦೬ರಲ್ಲಿ ಬಂದ ‘ಮರ್ಚಂಟ್ ಆಫ್ ವೆನಿಸ್’ ಚಲನಚಿತ್ರದಲ್ಲಿಯೂ ಈ ಸಲಿಂಗಿ ಸಂಬಂಧದ ಎಳೆ ಇನ್ನೂ ಗಾಢವಾಗಿಯೇ ಇದೆ. (ಶೇಕ್ಸ್ಪಿಯರನ ಕಾಲದಲ್ಲಿ ಪ್ಲೆಟೊನಿಕ್ ಗಂಡು, ಗಂಡಿನ ಸಂಬಂಧ (ಲೈಂಗಿಕಾರ್ಷಣೆಯಿಲ್ಲದ) ಬೇರೆಲ್ಲ ಸಂಬಂಧಗಳಿಗಿಂತ ಪವಿತ್ರವಾದದ್ದು. ಪಾತ್ರಗಳ ಹೊರಗಡೆಯ ನಡುವಳಿಕೆಯಿಂದ ನಾವು ಏನೇನೋ ಅರ್ಥೈಸಲಿಕ್ಕೆ ಹೋಗಬಾರದು ಎಂದು ಆ ಚಿತ್ರದ ನಿರ್ದೇಶಕ ಹೇಳಿಕೊಂಡಿದ್ದ.) ಆ ವಿಷಯ ಇರಲಿ, ನೀನಾಸಮ್‌ನ ಆ ಚರ್ಚೆಯಲ್ಲಿ ಭಾಗವಹಿಸಿದ್ದ ಹಿರಿಯರೊಬ್ಬರು ‘ಈ ಪಾತ್ರಗಳ ಸಲಿಂಗ ಸಂಬಂಧದ ಬಗ್ಗೆ ಅನವಶ್ಯಕವಾದ ಚರ್ಚೆ ಆಗುತ್ತಾ ಇದೆ ಎಂದು ಕಾಣಿಸುತ್ತದೆ. ನಾವೆಲ್ಲ ಹಳಿಯಲ್ಲಿ ಬೆಳೆದವರು. ನಮ್ಮ ಗೆಳೆಯರನ್ನು ಒಬ್ಬರನ್ನೊಬ್ಬರು ಮುಟ್ಟುತ್ತಿದ್ದೆವು, ಒಬ್ಬರ ಹೆಗಲ ಮೇಲೆ ಇನ್ನೊಬ್ಬರು ಕೈ ಹಾಕುತ್ತಿದ್ದೆವು. ಅಷ್ಟಕ್ಕೆಲ್ಲ ಸಲಿಂಗ ಸಂಬಂಧ ಎಂದು ತಿಳಕೊಂಡರೆ ಹೇಗೆ?’ ಎಂದು ಹೇಳಿದರು.

ಆ ಹಿರಿಯರ ಮಾತಿಗೆ ಗೌರವಯುತವಾಗಿಯೇ ಅಸಮ್ಮತಿಯನ್ನು ಸೂಚಿಸುವ ಕಾಲವಿದು.

ನಾಗರಿಕತೆಯ ಪರಿಣಾಮವೋ, ಅಥವಾ ಇನ್ನೇನೋ ‘ಕೇವಲ ಸ್ನೇಹ’ ಎನ್ನುವುದು ಬರೇ ಇದ್ದು ತೋರಿಸಲಾಗದು, ಅದನ್ನು ಪುರಾವೆ ಸಮೇತ ತೋರಿಸಬೇಕಾದ ಸಂದರ್ಭ ನಮ್ಮ ಮುಂದೆ ಇದೆ. ಕಾಲೇಜಿನಲ್ಲಿದ್ದಾಗ ಒಂದೇ ಮಂಚದಲ್ಲಿ ಮಲಗಿಯೂ ಉಳಕೊಳ್ಳುತ್ತಿದ್ದ ‘ಕೇವಲ ಸ್ನೇಹ’ ಈಗ ಅಷ್ಟು ಸುಭವಾಗಿ ದೊರೆಯುವುದಿಲ್ಲ. ಎಲ್ಲ ಸಂಬಂಧಗಳಿಗೂ ಲೈಂಗಿಕ ಲಗತ್ತಿತ್ತು ಈ ನಾಗರೀಕತೆ ಅಪ್ಪಟ ಗೆಳೆತನವನ್ನು ಹಾಳುಮಾಡಿಹಾಕಿದೆ. ಅದಕ್ಕೆ ಲಿಂಗ ಪರಿಧಿಯಿಲ್ಲ ಎನ್ನುವುದನ್ನು ನಾವು ಜಾಗರೂಕರಾಗಿ ಗಮನಿಸಬೇಕಾಗಿದೆ. ನಾಲ್ವರು ಒಂದೇ ಕೋಣೆಯಲ್ಲಿ ಮುಜುಗರವಿಲ್ಲದೇ ಮಲಗಬಹುದೇನೋ, ಇಬ್ಬರು ಮಾತ್ರ ಒಂದು ಕೋಣೆಯಲ್ಲಿ ಮುಜುಗರವಿಲ್ಲದೇ ಮಲಗಲಾಗದ (ಒಂದೇ ಲಿಂಗದ ಅಥವಾ ವಿರುದ್ಧಲಿಂಗದ) ಕಾಲ ಬಂದಿದೆ.

* * *

ಕೆಲವು ವರ್ಷಗಳ ಹಿಂದೆ ನನ್ನ ಜತೆಗೆ ಕೆಲಸ ಮಾಡುತ್ತಿದ್ದ ನನ್ನ ಜತೆಕೆಲಸಗಾರರೊಬ್ಬರು ಕೆಲಸ ಬಿಟ್ಟು ಬೇರೊಂದು ಕೆಲಸಕ್ಕೆ ಹೋದಾಗ ನಾನು ಅವರನ್ನು ಡ್ರಿಂಕಿಗೆಂದು ಆಹ್ವಾನಿಸಿದ್ದೆ. ಬಹಳ ಮುಜುಗರದಿಂದ ಬರಲು ಒಪ್ಪಿಕೊಂಡಿದ್ದರು. ಬರೇ ಜೋಡಿಗಳಿದ್ದ ರೆಸ್ಟುರೆಂಟಿನಲ್ಲಿ ನಾವಿಬ್ಬರೇ ಗಂಡಸರು. ಎರಡು ಡ್ರಿಂಕು, ಊಟವಾದ ನಂತರ ಮನೆಗೆ ಹೋಗುವ ಮೊದಲು ಆತ ‘ತಪ್ಪು ತಿಳಿಯಬೇಡ ಗುರು, this pretty much amounts to date.’ ಎಂದು ಹೇಳಿ ಹೋಗಿದ್ದರು.

ಪೇಯ, ಊಟ ಮತ್ತು ಮೂವಿ ಯೆಂದರೆ ಅದೊಂದು ಡೇಟ್ ಎನ್ನುವ ಕ್ಲೀಶೆಯ ಕಲ್ಪನೆಯನ್ನು ನಾಗರಿಕತೆ ನಮಗೆ ಕಲಿಸಿದೆ. ಪಕ್ಕಪಕ್ಕದಲ್ಲಿ ದರ್ಶಿನಿಯಲ್ಲಿ ಕೂತು ತಿಂಡಿ ತಿನ್ನುವ ಕಾಲ ಹೊರಟು ಹೋಗುತ್ತಾ ಇದೆ. ಮೂರು ವರ್ಷದ ಗಂಡು ಮಗು ಬೊಂಬೆಯ ಜತೆ ಆಟ ಆಡಿದರೆ, ಪಿಂಕುಪಿಂಕಾದ ಬಟ್ಟೆ ಹಾಕಿದರೆ ಹೌಹಾರಿಹೋಗುವ ಅಮ್ಮಂದಿರುಗಳನ್ನು ಈ ಕಾಲ ತಯ್ಯಾರು ಮಾಡುತ್ತಲಿದೆ. ‘ಬ್ರೇವ್ ಎನಫ್ ಟು ವೇರ್ ಪಿಂಕ್’ ಎನ್ನುವ ಟಿ ಶರ್ಟುಗಳು ಲೈಂಗಿಕ ಲಿಬರೇಷನ್ನಿನ ಚಿಹ್ನೆಗಳಾಗಿ ಕಾಣುತ್ತಲಿವೆ.

ಇಲ್ಲಿ ಹೆಂಗಸರೇ ಇನ್ನೂ ಕೊಂಚ ಅದೃಷ್ಟವಂತರು. ಮದುವೆ ಮನೆಯಲ್ಲಿ ಜತೆಗೆ ಕೂತು ಮೆಹಂದಿ ಮಾಡಿಕೊಳ್ಳಬಹುದು, ಪರಸ್ಪರರ ಉಗುರಿಗೆ ಬಣ್ನ ಹಚ್ಚಿಕೊಳ್ಳಬಹುದು, ಲಿಪ್‌ಸ್ಟಿಕ್ ಶೇಡನ್ನು ಬದಲಿಸಿಕೊಳ್ಳಬದು, ಕಿಟ್ಟಿಪಾರ್ಟಿಗಳಲ್ಲಿ ಮಾರ್ಟಿನಿಯ ಗ್ಲಾಸುಗಳನ್ನು ಲಿಪ್‌ಸ್ಟಿಕ್ ಗುರುತನ್ನು ಒರೆಸಿ ಬದಲಿಸಿಕೊಳ್ಳಬಹುದು. ಈಗಲೂ ಅವೆಲ್ಲ ಸಲ್ಲುತ್ತದೆ. ಹೆಣ್ಣು ನನ್ನ ಗರ್ಲ್‌ಫ್ರೆಂಡಿನ ಜತೆ ಶಾಪಿಂಗ್ ಹೋಗಿದ್ದೆ ಎಂದು ಹೇಳಿದರೆ ಅಲ್ಲಿ ಇನ್ನೂ ಆಕೆ ಸ್ನೇಹಿತಳಿದ್ದರೂ ಇರಬಹುದು ಎಂಬ ಅನುಮಾನ ಕೊಂಚವಾದರೂ ಉಳಕೊಳ್ಳುತ್ತದೆ, ಆದರೆ ಒಬ್ಬ ಗಂಡು ಯಾರನ್ನಾದರೂ ತೋರಿಸಿ ‘ಈತ ನನ್ನ ಬಾಯ್‌ಫ್ರೆಂಡ್ ‘ ಎಂದಲ್ಲಿ ಅಲ್ಲಿ ಲೈಂಗಿಕವಲ್ಲದ ಬೇರೆ ಯಾವ ಸಂಬಂಧಕ್ಕೂ ಆಸ್ಪದವೇ ಕೊಡದೇ ಇರುವ ಕಾಲ ಬಂದಿದೆ.

ನಾಲ್ಕು ಜನ ಗಂಡಸರು ಸೇರಿದ ತಕ್ಷಣ ಬಿಯರು ಕುಡಕೊಂಡು, ಇಲ್ಲವೇ ಎಲೆಯಡಿಕೆ ಹಾಕಿಕೊಂಡು ಡರ್ರಂತ ತೇಗಿಯೋ ಹೂಸಿಯೋ ಇರದೆ, ಇಸ್ಪೀಟಾಟದ ಕಾರ್ಡುಗಳನ್ನು ತೆಗೆಯದಿದ್ದರೆ ಅದು ಗಂಡು ಪ್ರಪಂಚದ ಬಾಂಡಿಂಗೇ ಅಲ್ಲ. ಹಾಗಿರುವಾಗ ಯಾರೇ ಒಬ್ಬ ತನ್ನ ಇನ್ನೊಬ್ಬ ಗೆಳೆಯನನ್ನು ಕಂಡು ‘ಐ ಲವ್ ಯು, ಮ್ಯಾನ್’ ಎಂದು ಯಾವ ಲೈಂಗಿಕ ಲೇಬಲ್ಲಿಲ್ಲದೇ ಹೇಳುವುದು ನಿಜಕ್ಕೂ ಧಾಡಸೀ ಕೆಲಸವೇ,

Wednesday, October 21, 2009

ಕೆಂಡಸಂಪಿಗೆಯ ಮರಣ

ಅಂತರ್ಜಾಲದ ಕನ್ನಡದ ತಾಣ ಕೆಂಡಸಂಪಿಗೆ ಅಕಾಲಿಕ ಮರಣವನ್ನಪ್ಪಿದೆ. ಇದ್ದಕ್ಕಿದ್ದಂತೆ ಈ ತಿಂಗಳ ಮೊದಲ ದಿನದಂದು ‘ಇನ್ನುಮುಂದೆ ಕೆಂಡಸಂಪಿಗೆ ಯ ಪ್ರಕಟಣೆಯನ್ನು ನಿಲ್ಲಿಸಿದ್ದೇವೆ, ಇದುವರೆವಿಗೂ ನಮ್ಮೊಂದಿಗೆ ಸಹಕರಿಸಿದ ಎಲ್ಲ ಬರಹಗಾರರಿಗೆ ಮತ್ತು ಓದುಗವರ್ಗಕ್ಕೆ ಧನ್ಯವಾದಗಳು’ ಎಂಬ ಒಂದು ಸಾಲಿನ ಓಬಿಚುಯರಿಯೊಂದಿಗೆ ಕೆಂಡಸಂಪಿಗೆ ತನ್ನ ಅಂತರ್ಜಾಲ ತಾಣವನ್ನು ಶಾಶ್ವತವಾಗಿ ಮುಚ್ಚಿದೆ. ಇನ್ನುಮುಂದೆ ದಿನಂಪ್ರತಿ ಈ ತಾಣವನ್ನು ನೋಡಹೋಗುತ್ತಿದ್ದ ಜಾಲತಾಣಿಗರಿಗೆಲ್ಲ ಏನೋ ಕಳಕೊಂಡ ಇರುಸುಮುರುಸು.

ಕನ್ನಡದ ಅಂತರ್ಜಾಲ ಓದುಗರಲ್ಲಿ ಹೊಸ ಸಂಚಲನವನ್ನು ಉಂಟುಮಾಡಿದ್ದು ಕೆಂಡಸಂಪಿಗೆ. ವಿನ್ಯಾಸ, ವಸ್ತು, ಭಾಷೆ ಹಾಗೂ ಲಯದ ತಾಜಾತನದಿಂದ ಎಲ್ಲರ ಗಮನ ಸೆಳೆದಿತ್ತು. ಅನೇಕ ಹೊಸಬರಹಗಾರರನ್ನು ಹುಟ್ಟುಹಾಕಿದ್ದಷ್ಟೇ ಅಲ್ಲದೇ, ಅಂತರ್ಜಾಲವೆಂದರೆ ಮೂಗುಮುರಿಯುತ್ತಿದ್ದ ಅನೇಕ ಹಳೇಮಂದಿಯ ಕೈಯಲ್ಲಿಯೂ ಕೀಲಿಮಣೆ ಕೊಟ್ಟು ಕೆಲಸ ಮಾಡಿಸಿತು. ಎರಡು ವರ್ಷಗಳ ಕಾಲ ದಿನ ಬೆಳಗಾದರೆ ಕೆಂಡಸಂಪಿಗೆಯನ್ನು ಎದುರು ನೋಡುತ್ತಿದ್ದವರು ಎಷ್ಟೋ ಮಂದಿ. ಆದರೆ, ಈಗ ಏಕಾಏಕಿ ಮುಚ್ಚಿನಿಂತು ತನ್ನನ್ನು ನಂಬಿದ ಓದುಗ ಬಳಗಕ್ಕೆ ಬಹುದೊಡ್ಡ ನಿರಾಶೆಯನ್ನುಂಟುಮಾಡಿ ಹೊರಟುಹೋಗಿದೆ, ಕೆಂಡಸಂಪಿಗೆ.

ಅಂತರ್ಜಾಲದ ಪತ್ರಿಕೆಗಳ ವ್ಯಾಕರಣವನ್ನು ಚೆನ್ನಾಗಿ ಅರ್ಥಮಾಡಿಕೊಂಡೇ ತನ್ನ ಕೆಲಸವನ್ನು ಮಾಡುತ್ತಿತ್ತಂದಿತ್ತು, ಕೆಂಡಸಂಪಿಗೆಯ ಬಳಗ. ಒಂದಿಷ್ಟು ಸುದ್ದಿ, ಒಂದಷ್ಟು ಕತೆ, ಸುಂದರವಾದ ಕವನಗಳು, ಆತ್ಮಚರಿತ್ರೆ, ಪ್ರವಾಸಕಥಾನಕಗಳು, ಧಾರಾವಾಹಿ, ಕೊಂಚ ವಿಚಾರ, ಅಲ್ಲಲ್ಲಿ ಟಾಂಗುಗೊಡಿಸುವ ಬರಹಗಳು, ಬೇಕಿದ್ದಾಗ ಸುದ್ದಿಗೆ ಗುದ್ದುಕೊಡುವ ವಿವಾದಗಳು, ಚರ್ಚೆ, ಎಲ್ಲವೂ ಹದವಾಗಿ ಬೆರೆತಿದ್ದವು. (ಕೆಲವೊಮ್ಮೆ ಚರ್ಚೆ ಅತಿರೇಕವೆನಿಸಿದರೂ ಅಂತರ್ಜಾಲದ ಜಾಲತಾಣದ ಉಳಿಗಾವಿಗೆ ಇಂಥ ಚರ್ಚೆಗಳು ಅನಿವಾರ್ಯವೆಂಬುದನ್ನು ಇದರ ಸಂಪಾದಕವರ್ಗದವರು ಅರಿvದ್ದರೆಂದೇ ಈ ಮಾತನ್ನು ಹೇಳಬೇಕಾಗಿದೆ)

ಆದರೆ, ಈ ಕೆಂಡಸಂಪಿಗೆ ನಿಂತದ್ದೇಕೆ?

ಅಂತರ್ಜಾಲದಲ್ಲಿ ಕನ್ನಡದ ಇತಿಹಾಸ ಬಹಳ ಹಳೆಯದೇನಲ್ಲ. ನನಗೆ ಗೊತ್ತಿದ್ದಹಾಗೆ ಸಮಾಚಾರಪತ್ರಿಕೆಗಳಲ್ಲಿ ‘ಸಂಜೆವಾಣಿ’ ಮೊಟ್ಟಮೊದಲಬಾರಿಗೆ ತನ್ನ ಅಸ್ಮಿತೆಯನ್ನು ಅಂತರ್ಜಾಲದಲ್ಲಿ ಸ್ಥಾಪಿಸಿದ್ದು ಪ್ರಾಯಶಃ ೧೯೯೫-೧೯೯೬ರ ಸುಮಾರಿಗೆ. ಆ ಸಂದರ್ಭದಲ್ಲಿ ಅಲೊಂದು ಇಲ್ಲೊಂದು ಜಿಯೋಸಿಟಿ ಮತ್ತಿತರ ವೆಬ್‌ಸೈಟುಗಳಿಂದ ಕೊಂಚವೇ ಕೊಂಚ ಎರವಲು ಪಡಕೊಂಡು ನಡೆಸುತ್ತಿದ್ದ ಕೆಲವು ತಾಣಗಳು ತಮ್ಮ ಕೆಲಸವನ್ನು ಕುಂಟಿಕೊಂಡು ನಡೆಸುತ್ತಲೇನೋ ಇದ್ದವು. ನಂತರ ಅನೇಕ ದಿನಪತ್ರಿಕೆಗಳು ತಮ್ಮ ಮುದ್ರಿತ ಪತ್ರಿಕೆಯ ಅಂತರ್ಜಾಲ ಆವೃತ್ತಿಯನ್ನು ಜಾಲದಲ್ಲಿ ಪ್ರಕಟಿಸಿ ತಮ್ಮ ಓದುಗವರ್ಗವನ್ನು ಹಿಗ್ಗಿಸಿಕೊಳ್ಳುತ್ತಿದ್ದವು. ನಂತರ ಬಂದ ಕನ್ನಡಸಾಹಿತ್ಯ.ಕಾಮ್, ವಿಶ್ವಕನ್ನಡ.ಕಾಮ್, ಮುಂತಾದವುಗಳೂ ಆರಂಭದಲ್ಲಿ ವಿಶ್ವಾಸವನ್ನು ಮೂಡಿಸಿದ್ದಾದರೂ ನಂತರ ನೆಲಕಚ್ಚಿದ್ದಾವೆ. ಕನ್ನಡಸಾಹಿತ್ಯ.ಕಾಮ್ ಈಗ ಅಂತರ್ಜಾಲದ ವ್ಯಾಪ್ತಿಯ ಹೊರಗೆ ತನ್ನ ಕೆಲಸವನ್ನು ಮಾಡಿಕೊಂಡು ಬರುತ್ತಿದೆಯಾದರೂ ಅಂತರ್ಜಾಲದಲ್ಲಿ ಕನ್ನಡದ ಬೆಳವಣಿಗೆಗೆ ಲೈಬ್ರರಿಯ ಅಥವಾ ಪ್ರಮುಖ ಲೇಖಕರ ಬರಹಗಳ ಆರ್ಕೈವ್ ಆಗುವುದನ್ನು ಬಿಟ್ಟರೆ ಹೆಚ್ಚಿನ ಕೆಲಸವನ್ನು ಮಾಡಲು ಇಲ್ಲಿ ಸಾಧ್ಯವಾಗಿಲ್ಲ. ನಮ್ಮೆಲ್ಲರನ್ನೂ ಬೆಳೆಸಿದ ದಟ್ಸ್‌ಕನ್ನಡ.ಕಾಮ್‌ನ ಆದ್ಯತೆಗಳು ಈಗ ಸಂಪೂರ್ಣವಾಗಿ ಬೇರೆಯಾಗಿದೆ.

ಒಂದು ಪತ್ರಿಕೆ ನೆಲಕಚ್ಚುವುದರ ವಿಷಯದಲ್ಲಿ ಪತ್ರಿಕೆಯ ಆಡಳಿತವರ್ಗಕ್ಕೆ ಒಂದು ಹೊಣೆಗಾರಿಕೆ ಇರಬೇಕಲ್ಲವೇ? ಇಲ್ಲಿ ಹೊಣೆಗಾರಿಕೆಯೆಂದರೆ ಬರೇ ಆರ್ಥಿಕವಾದದ್ದಷ್ಟೇ ಅಲ್ಲ, ಸಾಂಸ್ಕೃತಿಕ ಜವಾಬ್ದಾರಿ ಎಷ್ಟಿರಬೇಕು? ಬರೇ ಬಾಟಮ್‌ಲೈನ್ ನೋಡುತ್ತಾ ಈ ಪತ್ರಿಕೆಯಿಂದ ನಮಗೆ ಲಾಭವಿಲ್ಲವೆಂದು ಇಡೀ ಪತ್ರಿಕೆಯನ್ನು ನಿಲ್ಲಿಸಿದರೆ ಅದನ್ನು ಓದುವ ವರ್ಗದ ಆಶಯಗಳನ್ನು ಬಲಿಕೊಟ್ಟಂತೆ. ಆದ್ದರಿಂದ ಒಂದು ಪತ್ರಿಕೆಯನ್ನು ಕಟ್ಟಿ ಬೆಳೆಸುತ್ತಿರುವಾಗ ಅದರ ವ್ಯವಸ್ಥಾಪಕ ಮಂಡಳಿ ಅದರ ಸೃಜನಶೀಲ ಸಂಪನ್ಮೂಲಗಳನ್ನು ಬೆಳೆಸುವುದರ ಜತೆಗೆ ಆ ಪತ್ರಿಕೆ ತನ್ನನ್ನು ತಾನು ಪೋಷಿಸಿಕೊಂಡು ಹೇಗೆ ಬೆಳೆಯಬಲ್ಲದೆನ್ನುವುದಕ್ಕೆ ರೂಪುರೇಷೆಗಳನ್ನು ಹಾಕಿಕೊಳ್ಳುವುದು ಬಹಳ ಅವಶ್ಯ. ಇಲ್ಲದಿದ್ದರೆ ಓದುಗವರ್ಗವನ್ನು ಬೆಳೆಸುವುದರ ಖುಷಿಯ ಜತೆಗೆ ಅದನ್ನು ಸಾಯಿಸುವುದರ ಜವಾಬ್ದಾರಿಯನ್ನೂ ಹೊರಬೇಕಾಗುತ್ತದೆ.

ಕೆಂಡಸಂಪಿಗೆಯಂತ ಪತ್ರಿಕೆ ಶುರುವಾಗಿ ಬೆಳೆದಾಗ ಅದೊಂದು ಪತ್ರಿಕೆಯಾಗಿ ಉಳಿಯುವುದಿಲ್ಲ. ಒಂದು ಸಮುದಾಯದ ಆಶಯವಾಗುತ್ತದೆ. ಮುಖವಾಣಿಯಾಗುತ್ತದೆ. ತಾನೇ ಒಂದು ಸಮುದಾಯವಾಗುತ್ತದೆ. ತಾನೂ ಬೆಳೆಯುವುದರ ಜತೆಗೆ ತನ್ನನ್ನು ಬೆಳೆಸುತ್ತಿರುವ ಸಮುದಾಯವನ್ನೂ ಬೆಳೆಸುತ್ತದೆ.

ಹಾಗೆಯೇ ತಾನು ಸಾಯುವುದರ ಜತೆಗೆ ಈ ಸಮುದಾಯವನ್ನೂ ಅದರ ಆಶಯವನ್ನೂ ಸಾಯಿಸುತ್ತದೆ.

ಕನ್ನಡದ ಬಹಳಷ್ಟು ಲಿಟ್ ಮ್ಯಾಗಜೀನುಗಳು ಒಂದು ನಿರ್ದಿಷ್ಟ ಸಮುದಾಯದ ಮುಖವಾಣಿಯೆನ್ನುವುದು ಒಂದು ರೀತಿ ನಿಜ. ಎಲ್ಲವೂ ಸಮಷ್ಟಿಯ ಸಂಸ್ಕೃತಿ, ಸಾಹಿತ್ಯದ ಪೋಷಣೆಯ ಹೆಸರಲ್ಲೇ ಪ್ರಾರಂಭವಾದರೂ ಎಲ್ಲೋ ಒಂದು ಕಡೆ ಅವು ತಮ್ಮದೇ ಆದ ಒಂದು ಓದುಗವರ್ಗವನ್ನು ಸೃಷ್ಟಿಸಿಕೊಳ್ಳುತ್ತವೆ. ಹಾಗೆ ಸೃಷ್ಟಿಮಾಡಿದ ಓದುಗ ವರ್ಗಕ್ಕೆ ತಾನೇ ಬೆಳೆಸಿದ ಸಂವೇದನೆಯಿಂದಲೋ ಅಥವಾ ಅದೇ ಸಂವೇದನೆಯಿರುವ ಓದುಗರು ಮಾತ್ರ ಆ ಪತ್ರಿಕೆಗಳನ್ನು ಓದುತಾರೋ, ಓದುಗರೂ, ಪತ್ರಿಕೆಯೂ ಪರಸ್ಪರರ ಆಶಯಕ್ಕೆ ಧೋರಣೆಗೆ ಪರಸ್ಪರ ಪೂರಕವಾಗಿ ಕೆಲಸ ಮಾಡಿರುತ್ತಾರೆ. ಆ ಆಶಯಗಳು, ನಂಬಿಕೆಗಳು ತನ್ಮೂಲಕ ಒಂದು ಚಳುವಳಿಯೇನಾದರೂ ಸೃಷ್ಟಿಯಾಗಿದ್ದಲ್ಲಿ ಅವುಗಳೆಲ್ಲದರ ನಿರ್ಗಮನದ ಜತೆಗೆ ಆ ಪತ್ರಿಕೆಯ ಆಯಸ್ಸೂ ಮುಗಿದಿರುತ್ತದೆ. ನಂತರ ಪತ್ರಿಕೆ ಇರಬೇಕೆಂದು ಯಾರೂ ಕೇಳುವುದೂ ಇಲ್ಲ. ಮುಚ್ಚಿಹೋಯಿತೆಂದು ಯಾರೂ ದುಃಖಿಸುವುದೂ ಇಲ್ಲ. ಇದೊಂದು ಪತ್ರಿಕೆಯ ಸ್ವಾಭಾವಿಕ ಮರಣ. ಅಂದರೆ ಪ್ರತೀ ಪತ್ರಿಕೆಗೂ ಒಂದು ನಿರ್ದಿಷ್ಟ ಆಶಯವಿದೆ, ಆಯಸ್ಸಿದೆ ಎಂದು ನಂಬಿದ ಸಂಪನ್ಮೂಲ ವ್ಯಕ್ತಿಗಳಿರುವವರೆಗೆ ಅದರ ಸಾವೂ ಕೂಡ ಅರ್ಥಪೂರ್ಣವಾಗುತ್ತದೆ. ಅದರ ಬದುಕು ಮಾತ್ರ ಮುಖ್ಯವಾಗುತ್ತದೆ.

ಹಾಗೆಯೇ ಕೆಂಡಸಂಪಿಗೆಯೂ ಒಂದು ಸಮುದಾಯದ ಮುಖವಾಹಿನಿಯಾಗಿತ್ತೆಂಬುದನ್ನು ನಾವು ಗಮನದಲ್ಲಿದಬೇಕು. ಈ ಸಮುದಾಯ ಬಹುಸಂಖ್ಯಾತವೇನಲ್ಲ. ಬದಲಾದ ಜೀವನ ಶೈಲಿ, ಮೌಲ್ಯಗಳು, ಭೌಗೋಳಿಕ ರೇಖೆಯನ್ನು ಮೀರಿದ ಡಯಾಸ್ಪೊರಕ್ಕೆ ಹಾಗೆಯೇ ಎಲ್ಲದಕ್ಕೂ ಸಾಮಾನ್ಯವಾದ ನಮ್ಮ ಅವಸರ, ಧಾವಂತಕ್ಕೆ ಒಂದು ಅರ್ಥಪೂರ್ಣತೆಯನ್ನು ತಂದಿತ್ತು. ಹಾಗೆ ನೋಡಿದರೆ ಈ ಅಂತರ್ಜಾಲವೆನ್ನುವುದೇ ಒಂದು ಅವಸರದ ಓದಿಗೆ ಪ್ರಶಸ್ತವಾದ ತಾಣ. ಇಲ್ಲಿ ನಾವು ಅಂತರ್ಜಾಲವನ್ನು ಸರ್ಪ್ ಮಾಡುತ್ತೇವೆ, ಬ್ಲಾಗುಗಳನ್ನು ಸ್ಕ್ರೋಲಿಸುತ್ತೇವೆ. ಒಂದು ತಾಣದಿಂದ ಇನ್ನೊಂದು ತಾಣಕ್ಕೆ ಜಿಗಿಯುತ್ತೇವೆ. ನಮ್ಮ ಅಟೆಂಶನ್ ಸ್ಪಾನ್ ಕೇವಲ ಸೆಕೆಂಡುಗಳಲ್ಲಿ ಅಳತೆಮಾಡಲ್ಪಡುವ ಈ ಲೋಕದಲ್ಲಿ ಪ್ರತಿದಿನ ಬೆಳಿಗ್ಗೆ ಹದಿನೈದು ನಿಮಿಷವಾದರೂ ನಮ್ಮನ್ನು ಕೆಂಡಸಂಪಿಗೆ.ಕಾಮ್ ಎಂಬ ತಾಣ ತನ್ನ ಮುಂದೆ ಕೂರಿಸಿಕೊಳ್ಳಲು ಸಫಲವಾಗಿತ್ತು. ಕೆಲವೊಮ್ಮೆ ಸ್ಕ್ರೋಲಿಸುತ್ತಾ, ಮಗದೊಮ್ಮೆ ಓದುತ್ತಾ, ಆಗಾಗ ಕಮೆಂಟಿಸುತ್ತಾ, ಬಹಳಬಾರಿ ಬರೇ ಕಮೆಂಟುಗಳನ್ನು ಮಾತ್ರ ಓದುತ್ತಾ, ಕಮೆಂಟಿಗೊಂದು ಕಮೆಂಟಿಸುತ್ತಾ, ಒಮ್ಮೆ ಓದಲಿಕ್ಕಾಗದನ್ನು ಮತ್ತೆ ಮಧ್ಯಾಹ್ನವೋ, ಸಂಜೆಯೋ ಓದಲಿಕ್ಕೆ ಮತ್ತೆ ಮತ್ತೆ ತನ್ನ ಬಳಿ ಬರುವಂತೆ ಮಾಡಲೂ ಸಫಲವಾಗಿತ್ತು.

ಆದರೆ, ಸೃಜನಶೀಲತೆಯೆನ್ನುವುದು ಬರೇ ಬೌದ್ಧಿಕತೆಯ ಮಟ್ಟದಲ್ಲಿ ನಿಂತುಬಿಟ್ಟರೆ ಆಗುವುದೇ ಹೀಗೆ. ವ್ಯವಹಾರದಲ್ಲಿ ಕ್ರಿಯೇಟಿವ್ ಆಗದಿದ್ದಲ್ಲಿ ಇಂಥ ಅಕಾಲ ಮರಣಗಳು ಬರಬಹುದೇನೋ? ಈ ಅಂತರ್ಜಾಲದ ಜಾಲತಾಣವನ್ನು ನಿರ್ವಹಿಸಿಕೊಂಡು ಹೋಗುವುದರ ಲೊಜಿಸ್ಟಿಕ್ಸ್ ನನಗೆ ಗೊತ್ತಿಲ್ಲ, ಈಗಂತೂ ಕಾಸಿಗೊಂದು ಕೊಸರಿಗೊಂದು ಬ್ಲಾಗುಗಳು ಇರುವ ಈ ಕಾಲದಲ್ಲಿ ಇಂಥ ಒಂದು ಸೈಟು ತನ್ನ ಉಳಿಕೆಯನ್ನು ಸೃಜನಶೀಲವಾಗಿ ಗ್ರಹಿಸಲಿಲ್ಲವಲ್ಲ ಎನ್ನುವ ವ್ಯಥೆಯಿದೆ. ಇದಕ್ಕೆ ಬೇಕಾದ ಜಾಹಿರಾತುಗಳು ಸಿಗಲಿಲ್ಲವೇ? ಹೂಡಿಕೆದಾರರಿಲಿಲ್ಲವೇ? ಎಲ್ಲವೂ ವೇದ್ಯ. ಆದರೆ, ಯಾಕಾಗಲಿಲ್ಲ.

ಅಂತರ್ಜಾಲವೆನ್ನುವುದೇ ಒಂದು ಮಿಥ್ಯಾಪ್ರಪಂಚ. ಇಲ್ಲಿ ಎಲ್ಲವೂ ವರ್ಚುಯಲ್. ಪತ್ರಿಕೆ ಪ್ರಿಂಟಾಗಿದ್ದರೆ ಎಷ್ಟು ಖರ್ಛಾಗಿದೆ ಎನ್ನುವ ಲೆಕ್ಕವಾದರೂ ಸಿಗುತ್ತದೆ. ಆದರೆ, ಬರೇ ಹಿಟ್‌ಗಳನ್ನು ನಂಬಿಕೊಂಡು ಇದರ ಮೇಲೆ ಬಂಡವಾಳ ಹೂಡುವ ಜಾಹಿರಾತು ಹೂಡುವ ಮಂದಿ ಸಿಗಲಿಲ್ಲವೇ?

ಬಲ್ಲವರು ಯಾರೋ ಹೇಳಿದ್ದರು. ನಾವು ಯಾವುದೇ ವೆಬ್‌ತಾಣವನ್ನು ಕ್ಲಿಕ್ಕಿಸಿದರೆ ಸಾಕು ಅದನ್ನು ನಾವು ಓದುತ್ತಿದ್ದೇವೆ ಎಂತಲೇ ಅರ್ಥ. ಇದಕ್ಕೆ ಹತ್ತಿರವಾದ ಹೋಲಿಕೆಯೆಂದರೆ ಅಂಗಡಿಯಿಂದ ಒಂದು ಪುಸ್ತಕವನ್ನು ಖರೀದಿಸಿ ತಂದರೆ ಆಯಿತು, ಅದನ್ನು ಓದಿದಂತೆಯೇ. ಪುಸ್ತಕವ್ಯಾಪಾರಿಗೆ ನೀವು ಆ ಪುಸ್ತಕವನ್ನು ಓದುತ್ತೀರೋ ಇಲ್ಲವೋ ಅನ್ನುವುದು ಮುಖ್ಯವಾಗುವುದೇ ಇಲ್ಲ.

ನಾನೂಹಿಸಿಕೊಳ್ಳುವ ಕಾರಣ ಬಹಳ ಸರಳ. ತಪ್ಪಿರಲೂ ಬಹುದು. ಸಂಪನ್ಮೂಲದ ಕೊರತೆಯಿದ್ದರೂ ಇರಬಹುದು. ಕನ್ನಡದ ಬಹಳಷ್ಟು ಈ ತರದ ಸೃಜನಶೀಲ ಚಟುವಟಿಕೆಗಳು ನಡೆಯುವುದು ಲಾಭವನ್ನು ನೆಚ್ಚಿಕೊಂಡು ಅಲ್ಲ ಎನ್ನುವುದು ಪ್ರಾಯಶಃ ನಮಗೆಲ್ಲ ಗೊತ್ತಿರುವ ವಿಷಯ. ಎಲ್ಲಿಯವರೆಗೆ ಲಾಭ, ನಷ್ಟಗಳ ಮೊಬಲಗು ಸರಿಹೋಗುತ್ತದೆಯೋ ಅಲ್ಲಿಯವರೆಗೆ ಇದು ನಡಕೊಂಡು ಹೋಗಬೇಕು. ಆದರೆ ಈ ಲಾಭ ನಷ್ಟಗಳ ಲೆಕ್ಕಚುಕ್ಕಿಗ ಬೇರೆ ವ್ಯಾಪಾರಿಯಾಗಿ, ಈ ಸೃಜನಶೀಲ ಸಂಪನ್ಮೂಲ ಬೇರೆಯಾಗಿದ್ದಲಿ, ಈ ಎರಡೂ ಶಕ್ತಿಗಳು ಸಮಾನಾಂತರವಾಗಿ ಕೆಲಸ ಮಾಡಲು ಶುರುಮಾಡುತ್ತವೆ. ಕ್ರಿಯೇಟಿವ್ ಟೀಮ್ ಹೆಚ್ಚು ಕ್ರಿಯಾಶೀಲವಾದಲ್ಲಿ ತಾಣದ ಬಗ್ಗೆ ಹೆಚ್ಚಿನ ನಂಬಿಕೆಯನ್ನು ಓದುಗವರ್ಗದಲ್ಲಿ ಮೂಡಿಸಲಾಗುತ್ತದೆ. ಆದರೆ, ಯಾವ ಕಾರಣದಿಂದ ಈ ಪತ್ರಿಕೆ ನಿಂತರೂ ಕೆಲವಾದರೂ ಓದುಗರಿಗೆ ‘ಛೆ ಐ ವಾಸ್ ಟೇಕನ್ ಫಾರ್ ಅ ರೈಡ್’ ಎಂಬ ಭಾವನೆ ಬಂದಲ್ಲಿ ಅನುಮಾನವೇನಿಲ್ಲ. ಜಯಂತ ಕಾಯ್ಕಿಣಿಯವರ ಸಂಪಾದಕತ್ವದಲ್ಲಿ ಬರುತ್ತಿದ್ದ ‘ಭಾವನಾ’ ನಿಂತಾಗ ಕೂಡ ಪತ್ರಿಕೆಯ ಓನರ‍್ಮಂದಿಯ ಬಾಟಮ್‌ಲೈನಿನ ಲೆಕ್ಕವನ್ನು ನೋಡಿ ಓದುಗರಿಗೆ ಮೈ ಉರಿದುಹೋಗಿತ್ತು.

ಆದರೆ, ಯಾರ ಮೈ ಉರಿದುಹೋಗುತ್ತದೆ ಅನ್ನುವುದೂ ಇಲ್ಲಿ ಮುಖ್ಯ. ಬಹಳಷ್ಟು ಮಂದಿ ಕನ್ನಡದ ಓದುಗರು, ಬರಹಗಾರರು ತಂಪಾಡಿಗೆ ತಾವು ಓದಿ ಖುಷಿಪಡುವವರು. ಪತ್ರಿಕೆ ಇದ್ದರೆ ಓದುತ್ತೇವೆ, ಇಲ್ಲವಾ ಇನ್ನೇನಾದರೂ ಓದುತ್ತೇವೆ ಎನ್ನುವ ಧೋರಣೆ ಯಿರುವವರು, ಮತ್ತು ಒಂದು ಪತ್ರಿಕೆ ಬರೆ ಪತ್ರಿಕೆಯಾಗಿ ಉಳಿದು ನಿಮ್ಮ ಜೀವನಶೈಲಿಯ ಯಾವ ಭಾಗವೂ ಆಗದೇ ಇದ್ದಲ್ಲಿ ಅದರ ಉಳಿವು ಅಸಾಧ್ಯ.
ಇದರ ಪರಿಣಾಮವೆಂದರೆ, ಇನ್ನಾರಾದಾರೂ ಕನ್ನಡದಲ್ಲಿ ಒಂದು ವೆಬ್ ಪತ್ರಿಕೆಯನ್ನು ಶುರುಮಾಡುತ್ತೀವೆಂದರೆ ಅದನ್ನು ಹೇಗೆ ನಂಬುವುದು ಎನ್ನುವ ಪರಿಸ್ಥಿತಿ ಬಂದು ಹೋಗಿದೆ. ಅಸಂಖ್ಯಾತ ಬ್ಲಾಗುಗಳು ಮತ್ತು ಮುದ್ರಣದಲ್ಲಿ ಲಭ್ಯವಿರುವ ಪತ್ರಿಕೆಗಳ ಅಂತರ್ಜಾಲ ಆವೃತ್ತಿಗಳನ್ನು ಬಿಟ್ಟರೆ ಅಂತರ್ಜಾಲ ಕ್ಕೇ ಎಕ್ಸ್‌ಕ್ಲ್ಯೂಸಿವ್ ಆದ ಒಂದು ಸದಭಿರುಚಿಯ ಪತ್ರಿಕೆ ಕನ್ನಡದಲ್ಲಿ ಬರುತ್ತದೆ ಎಂದರೆ ಅದರ ಬಗ್ಗೆ ನಂಬುವುದೇ ಅಸಾಧ್ಯವೇನೋ ಎಂಬ ಪರಿಸ್ಥಿತಿ ಬಂದು ಕೂತಿದೆ.

ಇದಕ್ಕೆ ಬರೇ ಕೆಂಡಸಂಪಿಗೆಯ ವ್ಯವಸ್ಠಾಪಕರನ್ನು ದೂರಿದಲ್ಲಿ ತಪ್ಪಾಗುತ್ತದೆ. ಇದರಲ್ಲಿ ನಮ್ಮ ಪಾಲೂ ಇದೆ ಎಂದು ನಂಬಿದಲ್ಲಿ ಮಾತ್ರ ಏನಾದರೂ ಅರ್ಥಪೂರ್ಣವಾಗಿ ಮಾಡಬಹುದು.

Saturday, July 25, 2009

ನಾನು, ನೀನು ಮತ್ತು ಅವನು

ಒಂದು ಕತೆ ಬರೆಯುವಾಗ ಅಥವಾ ಓದುವಾಗ, ಕತೆ ಹೇಳುತ್ತಿರುವ ನಿರೂಪಕ ಯಾರು ಎಂಬುದು ನಮಗೆ ಮುಖ್ಯವಾಗುತ್ತದಾ? ಮುಖ್ಯವಾಗಬೇಕಾ? ನಾನು ಹೇಳುತ್ತಿರುವುದು ಕತೆಗಾರನಲ್ಲ, ಬರೆಯುವ ವ್ಯಕ್ತಿಯ ಹೆಸರೂ ಅಲ್ಲ. ಕತೆಯನ್ನು ಉತ್ತಮ ಅಥವಾ ಪ್ರಥಮ ಪುರುಷದಲ್ಲಿ ಬರೆಯುವುದು, ಬರೆದುದನ್ನು ಅರ್ಥಮಾಡಿಕೊಳ್ಳುವುದು ಎಷ್ಟು ಮುಖ್ಯ?

ಬಹಳ ಕತೆ, ಕಾದಂಬರಿಗಳು ಪ್ರಥಮ ಅಥವಾ ಉತ್ತಮ ಪುರುಷದಲ್ಲಿ ಬರೆಯಲ್ಪಟ್ಟಿರುತ್ತವೆ, ನಿರೂಪಿಸಲ್ಪಟ್ಟಿರುತ್ತವೆ. ಪ್ರಥಮ ಪುರುಷದಲ್ಲಿ ಬರೆದ ಕತೆಗಳು ಮುಖ್ಯವಾಗಿ ಲೇಖಕನಿಗೆ ಮುಖ್ಯನಿರೂಪಕನಾಗಿ ಎಲ್ಲ ಪಾತ್ರಗಳನ್ನೂ "ಅವನು" "ಅವಳು" ಎಂದು ನಿರಪೇಕ್ಷವಾಗಿ ನೋಡುವ, ಬರೆಯುವ ಸಾಧ್ಯತೆಗಳನ್ನು, ಸ್ವಾತಂತ್ರ್ಯವನ್ನು ಕೊಟ್ಟಿರುತ್ತದೆ. ಇದು ಸಾಧ್ಯತೆಯೂ ಹೌದು, ಜವಾಬ್ದಾರಿಯೂ ಹೌದು, ಮಿತಿಯೂ ಹೌದು. ಯಾವುದೇ ಒಬ್ಬ ಲೇಖಕನೂ ತನ್ನ ಸುತ್ತಲಿನ ಪ್ರಪಂಚವನ್ನು ತನ್ನದೇ ಆದ ದೃಷ್ಟಿಯಿಂದ ನೋಡುತ್ತಿರುವುದರಿಂದ ಯಾವುದೇ ಪಾತ್ರವನ್ನು ಆತ ಚಿತ್ರಿಸುತ್ತಿದ್ದಾಗ ಅವನ ಪೂರ್ವಗ್ರಹಗಳ, ನಂಬಿಕೆಗಳ ಛಾಪು ಆಯಾ ಪಾತ್ರಗಳ ಮೇಲೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಬಿದ್ದೇ ಇರುತ್ತವೆ. ನಂಬಿಕೆಗಳನ್ನು ಪೂರಾ ತೊರೆದು ಪಾತ್ರಗಳನ್ನು ತಾವಾಗಿಯೇ ಆಯಾ ಪಾತ್ರಗಳ ಶಕ್ತಿಗೆ ಅನುಸಾರವಾಗಿ ಬೆಳೆಸುವುದು ಒಂದು ದೊಡ್ಡ ಸವಾಲು. ಪ್ರಪಂಚದ ಅತಿದೊಡ್ಡ ಕಾದಂಬರಿಕಾರರ ಜಾಣ್ಮೆ ತಾವು ಪಾತ್ರಗಳ ಹೊರಗಿದ್ದುಗೊಂಡು ತಾವು ಕಂಡದ್ದನ್ನು ಪಾತ್ರಗಳ ಮೂಲಕ ಅತ್ಯಂತ ಸಮರ್ಥವಾಗಿ ನಿರೂಪಿಸುವುದರಲ್ಲಿ ವ್ಯಕ್ತವಾಗಿದೆ. ಹೀಗೆ ಹೊರಗೆ ನಿಂತು ಕಾಣುವುದೂ ಒಂದೇ ಆಯಾಮದಲ್ಲಿದ್ದಾದುದರಿಂದ ಪೂರಾ ನಿರಪೇಕ್ಶವಾಗಿ ಈ ಪಾತ್ರಗಳನ್ನು ನೋಡುವುದು, ಚಿತ್ರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಯಾವಾಗ ನಿರೂಪಕ ತಾನೇ ಸೃಷ್ಟಿಕರ್ತ ಎಂದುಕೊಂಡು ಈ ಪಾತ್ರಗಳನ್ನು ಶೂನ್ಯದಿಂದ ಸೃಷ್ಟಿಸುವ ಕೆಲಸದಲ್ಲಿ ತೊಡಗುತ್ತಾನೋ ಆಗ ನಿರಪೇಕ್ಷತೆ ಹೊರಟುಹೋಗುತ್ತದೆ. ಯಾವಾಗ ಈ ಸೃಷ್ಟಿ ಲೇಖಕನ ಅನುಭವದ ವಿಸ್ತ್ರುತ ಪ್ರಕ್ರಿಯೆಯಾಗುತ್ತದೆಯೋ, ಆಗ ಆತನಿಗೆ ಈ ಪಾತ್ರಗಳ ಸೃಷ್ಟಿ, ಸ್ಥಿತಿ, ಲಯದ ಮೇಲೆ ಎಷ್ಟು ಹಕ್ಕಿರುತ್ತದೋ ಅಷ್ಟೇ ಈ ಪಾತ್ರಗಳ ಸ್ವತಂತ್ರ ಅಸ್ತಿತ್ವದ ಬಗ್ಗೆ ಕಾಳಜಿಯೂ ಇರುತ್ತದೆ.

ಓದುಗರಾದ ನಮ್ಮ ಅದೃಷ್ಟವೆಂದರೆ ಪ್ರಪಂಚದ ಮುಖ್ಯ ಕಾದಂಬರಿಗಳೆಲ್ಲ ಈ ರೀತಿ ಪ್ರಥಮ ಪುರುಷದಲ್ಲಿಯೇ ನಿರೂಪಿತವಾಗಿರುವುದು.

ಅದೇ ಉತ್ತಮ ಪುರುಷ ನಿರೂಪಣೆಯಲ್ಲಿ ಲೇಖಕನೇ ಒಂದು ಪಾತ್ರವಾಗಿಬಿಟ್ಟಿರುವುದರಿಂದ ಈ "ನಾನು" ಇಲ್ಲಿ ಅನೇಕ ಸ್ತರದಲ್ಲಿ ಕೆಲಸ ಮಾಡುತ್ತದೆ. ತೇಜಸ್ವಿಯವರ "ಕರ್ವಾಲೋ" ಶಾಂತಿನಾಥ ದೇಸಾಯರ ಸಂಬಂಧ" ಇಂತ ಕಾದಂಬರಿಗಳಲ್ಲಿ ಈ ನಿರೂಪಣೆ ಅಥೆಂಟಿಸಿಟಿಯ ಜತೆ ಒಂದು ಆಪ್ತತೆಯನ್ನೂ ಕೊಡುತ್ತದೆ. ಕುಂವೀಯವರ ಕತೆಗಳಲ್ಲಂತೂ ನಿರೂಪಕ ಸೃಷ್ಟಿಕರ್ತನೇ ಆಗಿಬಿಟ್ಟಿರುತ್ತಾನೆ. ಈ ಆಪ್ತತೆ ಯಾಕೆಂದರೆ, ಇಲ್ಲಿ ಕತೆಯ ನಿರೂಪಕನಿಗೂ ಮತ್ತೆ ಬರಹಗಾರನಿಗೂ ನಡುವೆ ಒಂದು ಗ್ಯಾಪ್ ಇದೆ ಎಂದು ನಾವು ಭಾವಿಸುವುದಿಲ್ಲ. ಹಾರುವ ಓತಿಯಾಗಲೀ, ಮಂದಣ್ಣನಾಗಲೀ ಅಥವಾ ಕರ್ವಾಲೋರವರಾಗಲೀ ಎಲ್ಲರೂ ತೇಜಸ್ವಿಯವರ ಜತೆಗೇ ಸಂವಹಿಸುತ್ತಿದ್ದಾರೆ ಎಂಬ ಭಾವನೆಯಲ್ಲಿಯೇ ನಾವು ಕತೆ ಓದುತ್ತೇವೆ. ಕೊನೆಗೆ ಕತೆ ಮುಗಿದಾಗಲೂ, ಈ ಹಾರುವ ಓತಿಯ ಒಂದು ಮಿಂಚಿನ ದರ್ಶನವಾಗಿ ಮಂದಣ್ಣನ ಕೈಯನ್ನು ಸಣ್ಣಗೆ ಸ್ಪರ್ಶಿಸಿ ನಂತರ ಈ ಸೃಷ್ಟಿಯ ಅನಂತತೆಯಲ್ಲಿ ಮಾಯವಾದ ಈ ವಿಸ್ಮಯವನ್ನು ನಿರೂಪಿಸುವ ನಿರೂಪಕ ಬೇರಲ್ಲ, ತೇಜಸ್ವಿಯವರು ಬೇರೆ ಅಲ್ಲ ಎಂದು ನಮಗನಿಸುತ್ತದೆ. ಕತೆಯ ಗಟ್ಟಿತನ ಹಾಗೂ ಉತ್ತಮ ಪುರುಷದ ನಿರೂಪಣೆ ಒಂದಕ್ಕೊಂದು ಪೂರಕವಾಗಿ ಮಾಡುವ ಅನುಕೂಲ ಇದು. ಇದೇ ಅನುಭವ ಕತೆಯಲ್ಲಿ ಇಂಥವನಿಗೊಬ್ಬನಿಗಾಯಿತು ಎಂದು ತೇಜಸ್ವಿಯವರು ಬರೆದಿದ್ದರೆ ಇದರ ದಿವ್ಯ ಅನುಭವ ಪ್ರಾಯಶಃ ಆಗುತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಇದನ್ನೇ ಕಾರಂತರ "ಅಳಿದ ಮೇಲೆ" ಹಾಗೂ "ಬೆಟ್ಟದ ಜೀವ"ದ ನಿರೂಪಕನಿಗೂ ಹೇಳಬಹುದು. (ಕಾರಂತರ ಈ ಕಾದಂಬರಿಗಳಲ್ಲಿ ನಿರೂಪಕನ ಹೆಸರೂ ಶಿವರಾಮ ಎಂದೇ ನಿರೂಪಿತವಾಗಿದ್ದು ಅದಕ್ಕೆ ಒಂದು ರೀತಿ ಆತ್ಮಕಾಥಾನಕ ರೂಪವನ್ನೂ ಕೊಟ್ಟಿಬಿಡುತ್ತದೆ). ಇದೇ ಮಾತನ್ನು ನಾವು ಬಹಳಷ್ಟು ಬರಹಗಾರರ ವಿಷಯದಲ್ಲಿಯೂ ಹೇಳಬಹುದು.

ಸಲ್ಮಾನ್ ರಶ್ದೀಯ "ಮಿಡ್‌ನೈಟ್ಸ್ ಚಿಲ್ಡ್ರನ್" ನ ಇಡೀ ಕಾದಂಬರಿ ಉತ್ತಮ ಪುರುಷದಲ್ಲಿಯೇ ನಿರೂಪಿತವಾಗಿದೆ. ಇಲ್ಲಿ ಸಲೀಮ್ ಸೈನಾಯಿ ಅನ್ನುವ ನಿರೂಪಕ ತನ್ನ ಕತೆಯಿರಲಿ, ತನ್ನ ಅಜ್ಜಿ, ಅಜ್ಜರಿಂದ ಹಿಡಿದು ಎಲ್ಲರ ಕತೆಯನ್ನೂ ಉತ್ತಮ ಪುರುಷದಲ್ಲಿಯೇ ಮಾಡುತ್ತಾನೆ. ಆದರೆ, ಇಲ್ಲಿ ಪಾತ್ರಗಳು ತಮ್ಮ ಕತೆಯನ್ನು ಹೇಳುವುದಿಲ್ಲ. ಬದಲಿಗೆ ನಿರೂಪಕ ಎಲ್ಲವನ್ನೂ "ನನ್ನಜ್ಜಿ, ನನ್ನಜ್ಜ, ಅಕ್ಕ, ಅಮ್ಮ" ಎಲ್ಲರ ಕತೆಯನ್ನೂ ಹೇಳುತ್ತಾ ಹೋಗುತ್ತಾನೆ. ಇಲ್ಲಿ ಆಯಾ ಪಾತ್ರಗಳ ಜತೆ ಅವನ ಸಂಬಂಧ "ನನ್ನಜ್ಜ" ಎಂದು ಹೇಳುವ ಬದಲು ಆತನ ನಿಜವಾದ ಹೆಸರಾದ "ಆಡಮ್ ಸೈನಾಯ್" ಎಂದು ಹೇಳಿದ್ದರೆ ಕಥೆಗೆ ಬೇರೆ ಆಯಾಮಗಳು ಒದಗಿಬರುತ್ತಿತ್ತು ಎಂದು ಹೇಳಲಾಗುವುದಿಲ್ಲ. ಇದೇ ಸಮಸ್ಯೆ ತೇಜಸ್ವಿಯವರ ಮಾಯಾಲೋಕದಲ್ಲಿಯೂ ಇದೆ. ಅಲ್ಲಿಯೂ ನಿರೂಪಕನ ಅನುಪಸ್ಥಿತಿಯಲ್ಲಿ ಆಗುವ ಘಟನೆಗಳನ್ನೂ ನಿರೂಪಕ ಹೇಳುವುದರಿಂದ ಉತ್ತಮ ಪುರುಷ ನಿರೂಪಣೆಯ ಪ್ರತಿ ಸಾಧ್ಯತೆಯನ್ನು ಕಾದಂಬರಿಕಾರ ಇಲ್ಲಿ ಉಪಯೋಗಿಸಿಕೊಂಡಿದ್ದಾನೆ ಎಂದು ಹೇಳಲಾಗುವುದಿಲ್ಲ. ಯಾಕೆಂದರೆ, ಇಲ್ಲಿ ನಿರೂಪಕನ ಹೊರತಾಗಿಯೂ ಆಯಾ ಪಾತ್ರಗಳು ಸ್ವತಂತ್ರವಾಗಿ ಜೀವಿಸಿದ್ದಾವೆ. ರಶ್ದೀಯಂತೂ ತಾನು ಹೇಗೆ ಹುಟ್ಟಿದೆ ಎಂಬುದಿರಲಿ, ತನ್ನಪ್ಪ ಅಮ್ಮನ ಪ್ರೇಮಪ್ರಕರಣಗಳು, ತಾನು ಅಮ್ಮನ ಗರ್ಭದಲ್ಲಿ ಭ್ರೂಣವಾಗಿದ್ದು, ಹುಟ್ಟಿದ್ದು ಎಲ್ಲವನ್ನೂ ಹೇಳುತ್ತಾ ಹೋಗುತ್ತಾನೆ. ಇದು ಅತಿವಾಸ್ತವತೆಯನ್ನು ಕೊಡುತ್ತದೆ ಹೊರತು ನಿಜವಾದ ಉತ್ತಮ ಪುರುಷದ ನಿರೂಪಣೆಯ ಅನುಕೂಲವನ್ನು ಕೊಡುವುದಿಲ್ಲ.

ನಿಜವಾಗಿ ಉತ್ತಮ ಪುರುಷದ ಸವಾಲಿರುವುದೆಂದರೆ ತಮ್ಮ ವೈಯುಕ್ತಿಕ ಅನುಭವದಾಚೆಯ ಪಾತ್ರಗಳ ಕಥೆಯನ್ನು ನಿರೂಪಿಸುವುದಾಗ ಅದನ್ನು "ನನ್ನ ಕತೆ"ಯೆನ್ನುವ ಹಾಗೆ ಹೇಳುವುದು. ಇದಕ್ಕೆ ಉತ್ತಮ ಉದಾಹರಣೆ, ಲಂಕೇಶರ "ಅಕ್ಕ" ಹಾಗೂ ಇತ್ತೀಚೆಗೆ ಬಂದ ಅರವಿಂದ ಅಡಿಗನ "ವೈಟ್ ಟೈಗರ್" ಕೊಳೆಗೇರಿಯ ಕ್ಯಾತ ಅಥವಾ ಕೃಷ್ಣ ಎಂಬ ಹುಡುಗ ತನ್ನ ಕಥೆಯನ್ನು "ಅಕ್ಕ" ಕಾದಂಬರಿಯಲ್ಲಿ ಹೇಳುತ್ತಾ ಹೋಗುತ್ತಾನೆ. ಹಾಗೆಯೇ, ಬಲರಾಮ್ ಹಲವಾಯಿ ಎಂಬ ಬಿಹಾರದ ಕೀಳುಜಾತಿಯ ವ್ಯಕ್ತಿಯೊಬ್ಬ ತನ್ನ ಕಥೆಯನ್ನು ಹೇಳುವುದನ್ನು ಇಂಗ್ಲಿಶಿನಲ್ಲಿ ಬರೆಯುತ್ತಾ ಹೋಗುತ್ತಾನೆ, ಅರವಿಂದ ಅಡಿಗ. ಎರಡೂ ಕಥನದಲ್ಲಿ ಮುಖ್ಯವೆನಿಸುವುದು ಏನೆಂದರೆ, ಬರಹಗಾರ ತಾನು ಕಂಡ ಲೋಕವನ್ನು ತನ್ನದೇ ಲೋಕವೆಂಬಂತೆ ಹೇಳುತ್ತಿದ್ದಾನೆ. ಇಲ್ಲಿ ಮುಖ್ಯವಾಗಿ ಕಂಡುಬರುವುದು ನಿರೂಪಕನಿಗೆ ಮತ್ತು ಬರಹಗಾರನಿಗೆ ನಡುವೆ ಇರುವ ಗ್ಯಾಪ್. ಈ ಗ್ಯಾಪ್ ಅನ್ನು ಕಾಪಾಡಿಕೊಳ್ಳದಿದ್ದರೆ ಬರಹಗಾರನ ಕಾಳಜಿಗಳು ನಿರೂಪಕನ ಕಾಳಜಿಗಳೂ ಆಗಿಬಿಡುತ್ತವೆ. ಇದರಿಂದ ತಪ್ಪಿಸಿಕೊಳ್ಳುವುದು ಬಹಳ ಕಷ್ಟ.

"ಅಕ್ಕ" ಕಾದಂಬರಿಯ ನಿರೂಪಕ ಕೊಳೆಗೇರಿಯ ಹುಡುಗ. ಆತ ಹಿಂದೆಂದೋ ಆಗಿರುವ ತನ್ನ ಕತೆಯನ್ನು, ಕೇವಲ ನೆನಪಿನಿಂದ ಮಾತ್ರ ಹೇಳುತ್ತಿದ್ದಾನೆ, ಅಲ್ಲ ಬರೆಯುತ್ತಿದ್ದಾನೆ. ಯಾಕೆ ಬರೆಯುತ್ತಿದ್ದಾನೆ ಹೇಗೆ ಬರೆಯುತ್ತಿದ್ದೇನೆ ಅನ್ನುವುದಕ್ಕೆ ಸಮಜಾಯಿಷಿಗಳನ್ನು ಕತೆಯ ಆರಂಭದಲ್ಲಿಯೇ ಕೊಡುತ್ತಾನೆ, ಆತ- "ನಂದು ಕೆಟ್ಟ ತಲೆ ಸಾರ್. ಅದರ ತುಂಬಾ ಒಂದಕ್ಕೊಂದು ತಗುಲಿಕೊಂಡು ಕಿತ್ತಾಡೋ ಐಟಂಗಳೇ. ನಾನು ನಾಲ್ಕು ಸಾಲು ಬರೆದರೆ ಒಂದು ಬೈಗುಳ ಬರುತ್ತೆ. ಅದಕ್ಕೇ ನಾನು ಬರೆದುಬಿಟ್ರೆ ಕನ್ನಡಮ್ಮನಿಗೆ ನೋವಾದೀತು ಅಂತ ಸುಮ್ಮನೇ ಇದ್ದೆ. ಆದ್ರೆ ಜೀವ ತಡೀಲಿಲ್ಲ ಸಾರ್. .ನನ್ನ ಮಾತೂ ಹಂಗೇಯ. ಯೋಚಿಸಿ ನೋಡಿದ್ರೆ ಅದು ಮಾತೇ ಅಲ್ಲ. ನರಸಿಂಹ ಮೇಸ್ತ್ರಿ, ಖಡವಾ ಇಂತವ್ರನೆಲ್ಲಾ ಬಯ್ದರೆ ಅದು ಬಯ್ಗಳ. ನಮ್ಮ ಪದ್ದಿ, ಮಾದೇವಿ, ಸಂಪೂರ್ಣಮ್ಮನ್ನ ಬೈದರೆ ಅದು ಬೈಗುಳ ಅಲ್ಲ. ಇದು ದಯವಿಟ್ಟು ತಮ್ಮ ಗಮನದಿಲ್ಲರಲಿ. ನಾನು ಬೈದದ್ದು ಬೈದಂಗಲ್ಲ ಅನ್ನಿಸಿದರೆ ಕತೆಯ ಮಜಾ ಕೆಡುತ್ತಲ್ವಾ ಸಾರ್. ... ನಾನು ತುಂಬಾ ಅವಸರದೋನು. ಒಂದು ಹೇಳೋಕೆ ಹೋಗಿ ಎರಡು ಹೇಳೋದೂ ಈ ಅವಸರದಲ್ಲೇ. ಅದು ಅಪಾಯವಿಲ್ಲ. ಎರಡು ಹೇಳಬೇಕಾದಾಗ ಒಂದೇ ಹೇಳಿ ಕಂಬಿ ಕಿತ್ತೋದು ನನ್ನ ಚಾಳಿ. ಆವಾಗ ನೀವು ಕಲ್ಪಿಸಿಕೊಳ್ಳಬೇಕಾಗುತ್ತೆ. ಸಾಹಿತ್ಯ ಅಂದ್ರೆ ಅದೇ ಅಂತ ಮೈಸೂರುಕಡೆ ಸಾಹಿತಿಗಳು ಈಚೆಗೆ ಹೇಳ್ತಿದ್ದಾರಂತೆ. ಒಮ್ದು ಸೀನ್ ಕೊಟ್ರೆ ಎರಡು ಸೀನ್ ನಿಮ್ಮ ತಲೇಲಿ ಬಂದ್ರೆ ನಂಗೂ ಒಳ್ಲೇದು, ನಿಮಗೂ ಮಜಾ."

ಓದುಗನಿಗೆ ಇಂಥಾ ಒಂದು ಕಾದಂಬರಿಯಿಂದ ಏನನ್ನು ನಿರೀಕ್ಷಿಸಬಹುದು ಅನ್ನುವುದನ್ನು ತಮ್ಮ ಪೀಠಿಕೆಯಂತಿರುವ ಮೊದಲ ಅಧ್ಯಾಯದಲ್ಲಿಯೇ ಹೇಳುತ್ತಾರೆ, ಲಂಕೇಶ್. ಇದರಲ್ಲಿ ಕ್ಯಾತ ತಾನು ಕೊಳೆಗೇರಿಯಲ್ಲಿದ್ದಾಗಿನ ಬದುಕನ್ನು ಕೇವಲ ನೆನಪಿನಿಂದ ಮಾತ್ರ ಹೇಳುತ್ತಿರುವಾಗ ಘಟನೆಗಳ ತುಣುಕಷ್ಟೇ ನಮ್ಮ ಮುಂದೆ ಇಡಬಹುದು. ಅದನ್ನು ಜೋಡಿಸಿಕೊಂಡು, ಖಾಲಿ ಇದ್ದಲ್ಲಿ ತುಂಬಿಸಿಕೊಂಡು ಮಧ್ಯೆ ಊಹಿಸಿಕೊಂಡು ನಮಗೆ ಬೇಕಂತೆ ಕಥೆ ಕಟ್ಟಿಕೊಳ್ಳುವ ಜವಾಬ್ದಾರಿ ಓದುಗರದ್ದು ಕೂಡ. ಇಲ್ಲಿ ಲಂಕೇಶರು ತಮ್ಮ ಅರಿವಿಗೆ ಬಂದ ಕೊಳೆಗೇರಿಯ ಬದುಕನ್ನು ಮಾತ್ರ ಅನಾವರಣ ಮಾಡಲಿಕ್ಕೆ ಈ ಉತ್ತಮ ಪುರುಷ ನಿರೂಪಣೆ ಮಾತ್ರವಲ್ಲ, ನೆನಪಿನಾಳದಿಂದ ಕತೆಯನ್ನು ಹೆಕ್ಕಿಕೊಳುವ ತಂತ್ರವನ್ನೂ ಬಹಳ ಜಾಣತನದಿಂದ ಉಪಯೋಗಿಸಿಕೊಂಡಿದ್ದಾರೆ. ಲಂಕೇಶರ ಅರಿವಿಗೆ ಬರದ ಕೊಳೆಗೇರಿಯ ಇನ್ನೊಂದು ರೂಪ ಕ್ಯಾತನಿಗೂ ಬಂದಿಲ್ಲ, ಅಥವಾ ಅದನ್ನು ಆತ ಹೇಳಲು ಮರೆತಿದ್ದಾನೆ.

ಹಾಗೆ ನೋಡಿದರೆ, ಲಂಕೇಶರ "ಮುಸ್ಸಂಜೆಯೆ ಕಥಾ ಪ್ರಸಂಗ" ಲಂಕೇಶರಿಗೆ ತೀರ ಪರಿಚಯವಿರುವ ಲೋಕ. ಅವರು ಹುಟ್ಟಿ ಬೆಳೆದ ಕೊನಗವಳ್ಳಿಯನ್ನೇ ಹೋಲುವ ಕಂಬಳ್ಳಿಯಂಥ ಊರಿನ ಬಗ್ಗೆ ಬರೆಯಬೇಕಾದರೆ ಉತ್ತಮ ಪುರುಷದ ನಿರೂಪಣೆಯನ್ನು ಮಾಡಿದ್ದರೆ ನಿರೂಪಣೆಗೆ ಒಂದು ಆಪ್ತತೆ ಸಿಕ್ಕುತ್ತಿತ್ತೇನೋ. ಆದರೆ ಲಂಕೇಶರಿಗೆ ಈ ಬಗೆಯ ನಿರೂಪಣೆಯ ಬಗ್ಗೆ ಸಂಶಯವಿದೆ. ತಮ್ಮ ಪರಿಚಿತ ಲೋಕವನ್ನು ಉತ್ತಮ ಪುರುಷದಲ್ಲಿ ಹೇಳಿದಾಗ ಈ ನಿರೂಪಕ ಮತ್ತು ನಾಯಕನ ನಡುವಿನ ಬಿರುಕನ್ನು ನಿಭಾಯಿಸುವುದು ತೀರ ದುಸ್ಸಾಧ್ಯವೆಂದು ಅವರಿಗೆ ಅರಿವಿದೆ. ಆದ್ದರಿಂದಲೇ ಇಲ್ಲಿ "ಕ್ಯಾತ" ನ ಲೋಕದಲ್ಲಿ ಪರಕಾಯ ಪ್ರವೇಶ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲಲ್ಲಿ ಕ್ಯಾತನ ಬದಲಾಗಿ ಲಂಕೇಶ್ ಬರಹಗಾರನಾಗಿ ಇಣುಕಿದರೂ ಬಹುಮಟ್ಟಿಗೆ ಈ ರೀತಿಯ ನಿರೂಪಣೆ ಲಂಕೇಶರ ಸಹಾಯಕ್ಕೆ ಬರುತ್ತದೆ.

ಹಾಗೆಂದು ಇಡೀ ಕಾದಂಬರಿ ಬರೇ ಉತ್ತಮ ಪುರುಷದಲ್ಲಿ ನಿರೂಪಿತವಾಗಿಲ್ಲ. ಕ್ಯಾತ ತನ್ನ ಕಥೆಯನ್ನು ಹೇಳುತ್ತಿರುವಾಗ ಅಲ್ಲಲ್ಲಿ ಅವನನ್ನು ನಾನು ಎಂದು ಹೇಳಿಕೊಳ್ಳದೇ ಕ್ಯಾತ ಎಂದೇ ಕರಕೊಳ್ಳುತ್ತಾನೆ. ಈ ಕೆಳಗಿನ ಸಾಲುಗಳನ್ನು ನೋಡಿದರೆ ಇದು ಇನ್ನೂ ಸ್ಪಷ್ಟವಾಗಬಹುದು.
"ಬಲು ಜೋರಾಗಿದ್ದಾಳಲ್ಲ ಪದ್ದಿ ಅಂತ ಮನಸ್ಸಿನಲ್ಲೇ ಮೆಚ್ತಾ ಕಾರಿನ ಮೂಲೇಲಿ ಕೂತ ಕ್ಯಾತ."
"ಯೋಚ್ನೆ ಮಾಡ್ತಾ ಮಾಡ್ತಾ ಕ್ಯಾತನಿಗೆ ಒಂತರಾ ಆಯಿತು"

ಕತೆಯನ್ನು ನಮಗೆ ಹೇಳುತ್ತಿರುವ ಕ್ಯಾತ ಮತ್ತು ಕತೆಯಲ್ಲಿರುವ ಕ್ಯಾತನಿಗೂ ನಡುವೆ ಒಂದು ಗ್ಯಾಪ್ ಇದೆ ಅನ್ನುವುದನ್ನು ನಮಗೆ ಸೂಚಿತವಾಗಿಸುತ್ತಾರೆ. ಈ ಪ್ರಥಮ-ಉತ್ತಮ ಪುರುಷದ ನಡುವಿನ ಜಿಗಿತ ಎಷ್ಟು ಸಲೀಸಾಗಿ ನಡೆಯುತ್ತದೆಯೆಂದರೆ ಅದು ಕಥೆಯ ಓಟಕ್ಕೆ ಎಲ್ಲೂ ಭಂಗವನ್ನು ತರುವುದೇ ಇಲ್ಲ. ಮತ್ತೆ "ನನ್ನಂತವನ ಕತೆ ಕೇಳೋಕೆ ನೀವೇನು ನನ್ನಂಗೆ ಕ್ಯಾತನಾ ಸರ್" ಎಂದು ಮತ್ತೆ ಮತ್ತೆ ಕೇಳುವ ನಿರೂಪಕ ಕ್ಯಾತ ಬಹಳ ಬಾರಿ ತನ್ನ ಮತ್ತು ತನ್ನ ವಾಚಕವರ್ಗಕ್ಕಿರುವ ಬಿರುಕನ್ನು ಹೇಳುತ್ತಲೇ ಇರುತ್ತಾನೆ.

ಉತ್ತಮ ಪುರುಷದ ನಿರೂಪಣೆಯ ಮುಖ್ಯ ಸಮಸ್ಯೆ ಅಥವಾ ತಪ್ಪುಗ್ರಹಿಕೆಯೆಂದರೆ- ಬರಹಗಾರ ಮತ್ತು ಓದುಗ ಇಬ್ಬರೂ ಕತೆಯ ನಿರೂಪಕನನ್ನೇ ಕತೆಯ ಬರಹಗಾರ ಎಂದು ತಿಳಿಯುವುದು. ಇದು ಬಹಳಷ್ಟು ಮಟ್ಟಿಗೆ ಸತ್ಯವಾದರೂ, ನಾವ್ಯ್ ಅರಿಯಬೇಕಾದ ಸತ್ಯವೆಂದರೆ ಕಥೆಯ ನಿರೂಪಕನೇ ಬೇರೆ, ಬರಹಗಾರನೇ ಬೇರೆ. ಇವರಿಗಿರುವ ಮುಖ್ಯ ವ್ಯತ್ಯಾಸವೆಂದರೆನಿರೂಪಕನಿಗೆ ಕತೆ ಅಥವಾ ಕಾದಂಬರಿಯ ಹೊರಗೆ ಎಂತ ಅಸ್ತಿತ್ವವೂ ಇಲ್ಲ, ಆದರೆ, ಬರಹಗಾರನಿಗೆ ಈ ಕತೆಯ ಹೊರಗೂ ರಕ್ತ, ಮಾಂಸ ತುಂಬಿದ ಅಸ್ತಿತ್ವವಿದೆ. ಈ ಗ್ಯಾಪ್ ಅನ್ನು ನಿಭಾಯಿಸುವುದು ಬಹಳ ಕಷ್ಟಕರವಾದ ವಿಷಯ,

ಈ ವ್ಯತ್ಯಾಸವನ್ನು ಬಹಳ ಪಳಗಿದ ಬರಹಗಾರರೂ ರೂಢಿಸಿಕೊಳ್ಳುವುದು ಕಷ್ಟ. ಹಾಗಾಗಿಯೇ ಕತೆ ಹಾಗೂ ಪ್ರಬಂಧಗಳು ಕೆಲವೊಮ್ಮೆ ಒಂದೇ ಮಾದರಿಯಲ್ಲಿ ಕಾಣುತ್ತವೆ.

ಕತೆಗಳನ್ನು ಉತ್ತಮ ಪುರುಷದಲ್ಲಿ ಬರೆಯುವುದು ಎಷ್ಟು ಕಷ್ಟವೋ, ಪ್ರಬಂಧಗಳನ್ನು ಉತ್ತಮ ಪುರುಷದ ಹಂಗಿಲ್ಲದೇ ಬರೆಯುವುದೂ ಅಷ್ಟೇ ಕಷ್ಟ. ಆಗಲೇ ಅವಕ್ಕೆ ನುಡಿಚಿತ್ರಗಳ, ಹೆಚ್ಚು ಹೆಚ್ಚು ಪ್ರತಿಮೆಗಳನ್ನು ಉಪಯೋಗಿಸಿ ಲಿರಿಕಲ್ ಆಗುವ, ಅಥವಾ ಮ್ಯೂಸಿಂಗ್‌ಗಳ ರೂಪ ಕೊಟ್ಟಾಗ ಸಾಧ್ಯ ಅನಿಸುತ್ತದೆ. ಇದರ ಉತ್ತಮ ಉದಾಹರಣೆ ಜಯಂತರ "ಬೊಗಸೆಯಲ್ಲಿ ಮಳೆ"

Saturday, June 13, 2009

ಕೇವಲ ಬರಹಗಾರ

ಶಾಂತಾರಾಮ್ ಎನ್ನುವ ಬೃಹತ್ ಕಾದಂಬರಿ ಬರೆದ ಗ್ರೆಗರಿ ಡೇವಿಡ್ ರಾಬರ್ಟ್ಸ್ ಆ ಕಾದಂಬರಿಯ ಶುರುವಿನಲ್ಲಿ ಬರೆಯುತ್ತಾನೆ. ‘ನಾನೊಬ್ಬ ಹುಟ್ಟು ಬರಹಗಾರ. ಕೇವಲ ರಹಗಾರ. ಎಂಥ ವಿಷಮ ಪರಿಸ್ಥಿಯಲ್ಲಿಯೂ ನಾನು ಬರೆಯುತ್ತಲೇ ಇದ್ದೆ. ಜೈಲಿನಲ್ಲಿರಲಿ, ಜೈಲಿನಿಂದ ತಪ್ಪಿಸಿಕೊಳ್ಳುವಾಗಲಿರಲಿ, ಅಥವಾ ಲಿಯೊಪೊಲ್ಡ್ ಕೆಫೆಯಲ್ಲಿ ಕೂತು ಮಾಫಿಯಾದವರೊಂದಿಗೆ ವ್ಯವಹಾರ ಕುದುರಿಸುತ್ತಿರಲಿ, ಯಾರನ್ನಾದರೂ ಹೇಗೆ ಮುಗಿಸಬೇಕೆಂದು ಪ್ಲಾನ್ ಮಾಡುತ್ತಿರಲಿ, ನಾನು ಬರೆಯುತ್ತಲೇ ಇರುತ್ತಿದ್ದೆ. ರೆಸ್ಟುರೆಂಟಿನಲ್ಲಿಡುವ ಟಿಶ್ಯೂ ಪೇಪರಿನ ಹಿಂದೆ, ಜೈಲಿನಲ್ಲಿ ಗೋಡೆಗಳ ಮೇಲೆ, ಟಾಯ್ಲೆಟ್ ಪೇಪರುಗಳ ಮೇಲೆ ಬರೆಯುತ್ತಲೇ ಇದ್ದೆ. ಬರೆಯದೇ ಇರದ ದಿನವೇ ಇಲ್ಲ. ಬರೆಯದೇ ಇರದೇ ನನಗೇ ಬದುಕಲಿಕ್ಕೇ ಬರುವುದಿಲ್ಲ.

ಈ ಗ್ರೆಗರಿ ಡೇವಿಡ್ ರಾಬರ್ಟ್ಸ್‌ನ ಚರಿತ್ರೆ ಗೊತ್ತಿಲ್ಲದವರಿಗೆ ಈತನ ಒಂದು ಪುಟ್ಟ ಪರಿಚಯ- ಈತ ಆಸ್ಟ್ರೇಲಿಯಾದಲ್ಲಿ ಒಬ್ಬ ಅಪರಾಧಿ. ಮಾದಕವಸ್ತುಗಳ ಚಟಕ್ಕಾಗಿ ಜನರನ್ನು, ಬಾಂಕುಗಳನ್ನು ಸುಲಿದಾತ. ಆ ತಪ್ಪಿಗಾಗಿ ಆತನಿಗೆ ಜೈಲು ಶಿಕ್ಷೆಯಾಗಿತ್ತು. ಆಸ್ಟ್ರೇಲಿಯಾದ ಜೈಲಿನಿಂದ ತಪ್ಪಿಸಿಕೊಂಡು ಮುಂಬಯಿಗೆ ಬಂದು ಅಲ್ಲಿ ಕೂಡ ಅನೇಕ ಅಕ್ರಮ ವ್ಯವಹಾರಗಳನ್ನು ನಡಿಸಿದ್ದ. ಮುಂಬಯಿಯಲ್ಲಿ ಕೆಲಕಾಲ ಕೊಳೇಗೇರಿಯಲ್ಲಿಯೇ ಜೀವಿಸಿದ್ದ. ಕೊಳೆಗೇರಿಯಲ್ಲೊಮ್ಮೆ ಬೆಂಕಿ ಬಿದ್ದಾಗ ಆತ ಅಲ್ಲಿಯವರ ಜೀವ ಉಳಿಸುವ ಸಲುವಾಗಿ ಒಂದಿಷ್ಟು ಜನರಿಗೆ ಪ್ರಥಮ ಚಿಕಿತ್ಸೆಯನ್ನು ಮಾಡಿದ್ದರಿಂದ ಅವನನ್ನು ಆ ಕೊಳೆಗೇರಿಯ ಜನ ಡಾಕ್ಟರೆಂದೇ ತಿಳಿದಿದ್ದರು. ಅಲ್ಲಿನವರಿಗೆ ಡಾಕ್ಟರಿಕೆ ಮಾಡುತ್ತಲೇ ಜತೆಜತೆಯಾಗಿ ಮುಂಬೈ ಮಾಫಿಯಾಕ್ಕೆ ಕೂಡ ಆತ ಕೆಲಸ ಮಾಡಿದ. ನಂತರ ಒಂದು ದಿನ ಆತನನ್ನು ಜರ್ಮನಿಯಲ್ಲಿ ಬಂಧಿಸಲಾಯಿತು. ಆತ ಅಲ್ಲಿ ಮತ್ತು ಆಸ್ಟ್ರೇಲಿಯಾಕ್ಕೆ ಹೋಗಿ ತನ್ನ ಶಿಕ್ಷೆಯನ್ನು ಪೂರ್ಣಗೊಳಿಸಿ ಬಂದ. ಈಗ ಮುಂಬಯಿಯಲ್ಲಿ ಒಂದು ಮಲ್ಟಿಮೀಡಿಯಾ ಸಂಸ್ಥೆಯೊಂದನ್ನು ನಡೆಸುತ್ತಿದ್ದಾನೆ. ತನ್ನ ಜೀವನಕ್ಕೆ ಸಂಬಂಧಪಟ್ಟ ಘಟನೆಗಳನ್ನಾಧರಿಸಿ ಆತ ಒಂದು ಬೃಹತ್ ಕಾದಂಬರಿಯನ್ನು ಬರೆದಿದ್ದಾನೆ. ಆ ಪುಸ್ತಕದ ಹೆಸರೇ ಶಾಂತಾರಾಮ್.

ನನಗೆ ಮುಖ್ಯ ಅನಿಸಿದ್ದು ಈತನ ರೋಚಕ ಚರಿತ್ರೆಗಿಂತ ಈತ ಪ್ರತಿಪಾದಿಸುವ ‘ನಾನೊಬ್ಬ ಹುಟ್ಟು ಬರಹಗಾರ’ ಅನ್ನುವ ಪ್ರಮೇಯ. ಈತನಿಗೆ ಒಬ್ಬ ಸಾಹಿತಿಗೆ ಬೇಕಾದ ಯಾವ ಪೂರ್ವ ಸಿದ್ಧತೆಗಳ ಹಂಗಿಲ್ಲ. ಎಲ್ಲ ಉದ್ದಾಮ ಸಾಹಿತಿಗಳು ಪ್ರತಿಪಾದಿಸುವ ಕನಿಷ್ಠ ಓದೂ ಇಲ್ಲದೇ ಬರೆಯುವ ಗುಣ ಹೇಗೆ ಬರುತ್ತದೆ ಎಂಬ ಅಚ್ಚರಿಗೆ ಈತ ಉತ್ತರ. ತಮ್ಮ ಜೀವನವನ್ನು ಬರೆಯುತ್ತಲೇ ಪ್ರೀತಿಸುವ ಮತ್ತು ಬರೆದದ್ದೆಲ್ಲಾ ಸಾಹಿತ್ಯವಾಗಬೇಕು ಅನ್ನುವ ಪ್ರಲೋಭನೆಯಿಲ್ಲದೇ ಸುಮ್ಮನೇ ಬರೆಯುವುದೇ ತಮ್ಮ ಧರ್ಮ, ಬರೆಯದಿದ್ದರೆ ಸಾಧ್ಯವೇ ಇಲ್ಲ ಎನ್ನುವ ಒಂದು ಗುಂಪಿನ ಇರುವಿಕೆಯ ಬಗ್ಗೆ ಅನೇಕರಿಗೆ ನಂಬಿಕೆಯಿದೆ. ಭಾಷೆಯ ಮೇಲಿನ ಪ್ರಭುತ್ವಕ್ಕಾಗಿ ಅಥವಾ ಕಲ್ಪಿತ ಬರಹದ ವ್ಯಾಕರಣಕ್ಕಾದರೂ ಒಂದಿಷ್ಟು ಕ್ಲಾಸಿಕ್‌ಗಳಲ್ಲದಿದ್ದರೂ ಸಮಕಾಲೀನ ಪಲ್ಪ್ ಫಿಕ್ಷನ್ ನನ್ನಾದರೂ ಓದಿರಬೇಕಲ್ಲವಾ ಅನ್ನುವ ಅನುಮಾನವನ್ನೂ ಈತ ಸಮರ್ಥವಾಗಿ ಇದರಲ್ಲಿ ನಿವಾರಿಸಿಕೊಂಡಿದ್ದಾನೆ.

ಲಿಪಿಯೇ ಇಲ್ಲದಿದ್ದಾಗ ಸಾಹಿತ್ಯ ಇರಲಿಲ್ಲವೇ. ಬರೇ ಬಾಯಿಂದ ಬಾಯಿಗೆ ಹರಿದು ಬಂದ ಸೋಬಾನೆ ಪದಗಳು, ಮಲೆಮಾದೇಶ್ವರ, ಮುಂಟೇಸ್ವಾಮಿ, ಮೈಲಾರಲಿಂಗ ಸ್ವಾಮಿಯ ಪದಗಳು, ವಚನಗಳು ಇವಕ್ಕೆಲ್ಲ ಸಾಹಿತ್ಯಿಕ ಗುಣವಿಲ್ಲವೇ? ಇವರೆಲ್ಲ ಎಂಥ ಓದಿದ್ದರು? ಜೀವನಾನುಭವ ಮಾತ್ರದಿಂದ ಸಾಹಿತ್ಯ ಹುಟ್ಟುವುದಿಲ್ಲವೇ ಎನ್ನುವ ಪ್ರಶ್ನೆಗಳಿಗೆ ಉತ್ತರ ಬಹಳ ಸುಲಭವಲ್ಲ. ಸ್ವಲ್ಪ ಸುಲಭೀಕರಿಸಿ ಹೇಳಿದರೆ ನಮ್ಮ ಜನಪದ ಅಥವಾ ಮೌಖಿಕ, ಶ್ರವ್ಯ ಸಾಹಿತ್ಯ ಯಾವತ್ತೂ ಬರೆಯಬೇಕೆಂದು, ತಾವು ಬರೆದದ್ದೆಲ್ಲಾ ಸಾಹಿತ್ಯವಾಗಬೇಕೆಂದು ಬರೆಸಿಕೊಂಡದ್ದಲ್ಲ. ಅಲ್ಲಿದ್ದ ಬೇಕಾದಷ್ಟು ಕಥನ, ಇತಿಹಾಸ, ಪುರಾಣಗಳಲ್ಲಿ ನಂತರ ನಾವು ಸಾಹಿತ್ಯಿಕ ಗುಣಗಳನ್ನು ಹುಡುಕಿಕೊಂಡೆವು. ಆದರೆ, ಈಗ ಬರೆಯುತ್ತಿರುವ ನಮಗೆ ಸಾಹಿತಿ ಅನಿಸಿಕೊಳ್ಳಲು ಇಷ್ಟಪಡುವವರಿಗೆ ಈ ಹೆಚ್ಚು ಓದಿರದವರು ಬರೆಯುವ ‘ಸ್ಪಾಂಟೇನಿಯಸ್ ಬರವಣಿಗೆ’ ಎಷ್ಟು ಪ್ರಸ್ತುತ?. (ಇಲ್ಲಿ ಓದು ಎಂದರೆ ಸಾಹಿತ್ಯದ ಓದು ಮಾತ್ರ)

ಮುಖ್ಯವಾದ ಒಂದು ಪ್ರಮೇಯವೆಂದರೆ ಎಲ್ಲ ಸಾಹಿತಿಗಳು ಬಹಳಷ್ಟು ಓದಿಕೊಂಡಿರುತ್ತಾರೆ ಎಂದು ನಾವು ತಿಳಿದುಕೊಳ್ಳುವುದು.. ಆದರೆ, ನಮಗೆ ಆಶ್ಚರ್ಯ ಬರುವಹಾಗೆ ಎಷ್ಟೋಜನ ಉದ್ದಾಮ ಸಾಹಿತಿಗಳು ಸಿಕ್ಕಾಪಟ್ಟೆ ಓದಿಯೇನೂ ಇರುವುದಿಲ್ಲ. ಬಹಳ ಓದಿಕೊಂಡಿರುವಾತ ಬರೆಯುವುದೇ ಬೇರೆ. ಓದಿದಾತ ತನ್ನ ಓದಿನಿಂದ ಮುಗ್ಢತೆಯನ್ನು ಕಳೆದುಕೊಂಡು ಬುದ್ಧಿವಂತನಾಗಿಬಿಟ್ಟರೆ ತಕ್ಷಣ ಆತನೊಳಗಿನ ಕಲ್ಪನೆಗಳು ಕರಗಿ, ರೂಪಕಗಳು ಎರವಲಾಗಿ ಆತನೊಳಗಿನ ‘ಕಲ್ಪಿತ’ ಸಾಹಿತಿ ನಾಶವಾಗುತ್ತಾನೇನೋ? ಮತ್ತೊಂದು ಸಮಸ್ಯೆಯೆಂದರೆ, ಸಾಹಿತಿ ಬುದ್ಧಿವಂತನಾಗಿಬಿಟ್ಟರೆ ಮತ್ತು ಆತನಿಗೆ ಜನಕ್ಕೆ ಹಿತವಾಗಿ ಬಳಸಲು ಬೇಕಾದ ಭಾಷೆಯೊಂದು ಇದ್ದುಬಿಟ್ಟರೆ ಆತ ಹೇಳುವುದೇ ವೇದವಾಕ್ಯವಾಗಿಬಿಡುತ್ತದೆ ಮತ್ತು ಆತ ಪ್ರವಾದಿಯ ರೀತಿ ಎಲ್ಲವನ್ನೂ ಹೇಳಲಿಕ್ಕೆ ತೊಡಗುತ್ತಾನೆ. ಇದು ಓದಿನ ಸೈಡ್ ಎಫೆಕ್ಟ್.

ಹಾಗಾದರೆ, ಬುದ್ಧಿವಂತರು- ಸಾಹಿತ್ಯವನ್ನು ಹೆಚ್ಚು ಓದಿಕೊಂಡಿರುವವರು ಫಿಕ್ಷನ್ ಬರೆಯುವುದು ತಪ್ಪಾ? ಎ ಕೆ ರಾಮಾನುಜನ್‌ರವರ ‘ಬುದ್ಧಿವಂತನಿಗೆ ಕನಸು ಬಿದ್ದರೆ’ ಎಂಬ ಪುಟ್ಟ ಕವನದ ಈ ಸಾಲುಗಳನ್ನು ನೋಡೋಣ.

..ಎಷ್ಟೋ ರಾತ್ರಿ ಚಿಟ್ಟೆಯಾಗಿ
ಕನಸು ಕಂಡು ಕಡೆಗೆ
ಮನುಷ್ಯನೋ
ಚಿಟ್ಟೆಯೋ
ರಾತ್ರಿಯ ಚಿಟ್ಟೆ
ಹಗಲು ಮನುಷ್ಯನ ಕನಸೋ
ಹಗಲು ರಾತ್ರಿಯ ಕನಸೋ

ತಿಳಿಯದೆ ಭ್ರಮೆ ಹಿಡಿಯಿತು.

ಕನಸೂ ತರ್ಕಬದ್ಧವಾಗಿ ಬೀಳಬೇಕೆಂದು ಹಟಹಿಡಿದರೆ ಇಂತ ತಾಪತ್ರಯಗಳು ಉಂಟಾಗಬಹುದು.

ಒಬ್ಬ ಬರಹಗಾರನ ಕಸಬುದಾರಿಕೆಗೆ ಬೇಕಾದ ಮೂಲಭೂತವಾದ ಅವಶ್ಯಕತೆಗಳ ಬಗ್ಗೆ ಅಮೆರಿಕಾದ ಸಾಹಿತಿ ಜೇಮ್ಸ್ ಮಿಶೆನರ್ ಹೇಳುತ್ತಾನೆ.
೧. ಯಾವ ಭಾಷೆಯಲ್ಲಿ ಬರೆಯುತ್ತೀಯೋ ಆ ಭಾಷೆಯಲ್ಲಿ ಆದಷ್ಟು ಪ್ರಾವೀಣ್ಯತೆಯನ್ನು ಪಡೆದುಕೋ- ಅದರ ಸಮೃದ್ಧಿ ಮತ್ತು ಭಾಷೆಯ ವೈವಿಧ್ಯದ ಕಡೆ ಹೆಚ್ಚಿನ ಗಮನ ಹರಿಸಿದರೆ ಒಳ್ಳೆಯದು.
೨. ನಂತರ ನಿನ್ನದೇ ಆದ ಒಂದು ಭಾಷೆಯನ್ನು ರೂಢಿಸಿಕೋ, ಬೀದಿಯ ಲಿಂಗೋ ಅನ್ನು ಹಿಡಿದು ಕನಿಷ್ಠ ಮೂರು ಬೇರೆಬೇರೆ ಸಾಮಾಜಿಕ ಸ್ತರದಲ್ಲಿ ನಿನ್ನ ಭಾಷೆ ಪಳಗಿರಬೇಕು.
೩. ಸಾಹಿತ್ಯ ಎತ್ತಕಡೆ ಸಾಗುತ್ತಿದೆ ಎಂದು ನಿನಗೆ ಪರಿಚಯ ಮಾಡಿಸುವ ಕೆಲವಾದರೂ ನಿನ್ನ ಸಮಕಾಲೀನರ ಕೃತಿಗಳನ್ನು ಓದು. ನಾನು ಕ್ಲಾಸಿಕ್ ಸಾಹಿತ್ಯವನ್ನು ಶಾಸ್ತ್ರೀಯವಾಗಿ ಅಭ್ಯಸಿಸಿದ್ದನಾದ್ದರಿಂದ ಡಾಂಟೆ, ಬಾಲ್ಜಾಕ್, ಡಿಕನ್ಸ್, ಎಲಿಯಟ್, ದೊಸ್ತೋವ್ಸ್ಕಿ ಇತರರನ್ನು ಓದಿದ್ದೆ. ಆದರೆ ಸಾಹಿತಿಯಾಗಲು ಅವರನ್ನು ಓದಲೇಬೇಕಾದ ಅಗತ್ಯವಿಲ್ಲ. ಸಾಹಿತ್ಯದ ಚರಿತ್ರೆ ಗೊತ್ತಿದ್ದರೆ ಒಳ್ಳೆಯದು ಆದರೆ ಅದರಲ್ಲಿಯೇ ಮುಳುಗಿಹೋಗಬೇಕಿಲ್ಲ.
೪. ನಿನ್ನ ಪುಸ್ತಕವನ್ನು ಪ್ರಕಾಶಿಸಲು ನಿನಗೆ ಸಹಾಯ ಮಾಡಬಲ್ಲ ಎಲ್ಲರ ಜತೆ ಆದಷ್ಟು ಸಂಪರ್ಕವನ್ನಿಟ್ಟುಕೋ.
ಎಲ್ಲ ಕಸಬಿನಲ್ಲಿಯೂ ಕೆಲಸ ಕಲಿಯಲು ಸಿದ್ಧತೆ ಮಾಡಿಕೊಂಡಂತೆ ತಾನೇನು ಬರೆಯಬೇಕು ಎಂದು ನಿರ್ಧರಿಸಿದಾತ ಅದರಲ್ಲಿ ಕಲಿಯಬೇಕಾದ ಕಸಬುದಾರಿಕೆಯನ್ನು ಮತ್ತು ಪುಸ್ತಕ ಪ್ರಕಟಿಸಲು ಬೇಕಾದ ವ್ಯವಹಾರ ಜ್ಞಾನವನ್ನು ಈತ ಹೇಳುತ್ತಿದ್ದಾನೆ. ಕನ್ನಡದ ಸಂದರ್ಭದಲ್ಲಿ ಇವು ಕೊಂಚ ಬೇರೆಯಾಗಬಹುದು.

ಅನಂತಮೂರ್ತಿಯವರು ತಮ್ಮ ಒಂದು ಲೇಖನದಲ್ಲಿ ‘ಯಾವುದೇ ಸಾಹಿತಿಗೆ ಮುಖ್ಯವಾಗಿ ಪ್ರಸ್ತುತವಾಗುವುದು ಆತನ ಕಾಲದ ಹಿಂಚುಮುಂಚಿನ ಸುಮಾರು ನಾಲ್ಕು ಅಥವಾ ಐದು ದಶಕದ ಸಾಹಿತ್ಯ ಮಾತ್ರ.’ ಎಂದು ಉಲ್ಲೇಖಿಸಿದ್ದಾರೆ. ಇದೇ ವಾದವನ್ನು ಕೊಂಚ ಬೇರೆಯಾಗಿ ಮಂಡಿಸಿದರೆ ಒಬ್ಬನೇ ಸಾಹಿತಿ ಸುಮಾರು ಆರು ದಶಕಗಳಷ್ಟು ಕಾಲ ಸಕ್ರಿಯವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡರೆ ಆತನ ಆರಂಭಿಕ ಬರವಣಿಗೆ ಆತನಿಗೇ ಕೊನೆಗೆ ಪ್ರಸ್ತುತವಾಗದೇ ಹೋಗಬಹುದು. ಹಾಗಾಗಿ ಆಳವಾದ ಓದು ಅನ್ನುವುದು ಒಬ್ಬ ಬರಹಗಾರನಿಗೆ ಮುಖ್ಯವಾಗಿ ಫಿಕ್ಷನ್ ಬರಹಗಾರನಿಗೆ ಅಷ್ಟು ಅವಶ್ಯವಿಲ್ಲ ಎನ್ನಿಸುವ ಅಭಿಪ್ರಾಯ ಅಷ್ಟು ಅಸಾಧುವಾದುದಲ್ಲ. ಓದು ಒಬ್ಬ ಬರಹಗಾರನಿಗೆ ಕಸುಬನ್ನು ಕಲಿಸಿಕೊಡಲು ಮಾತ್ರ. ನಂತರ ಬರಹಗಾರ ತನ್ನನ್ನು ಶೋಧಿಸಿಕೊಳ್ಳುವುದು ಬರೆಯುತ್ತಾ ಹೋದಾಗ ಮಾತ್ರ. ಒಬ್ಬ ವೈದ್ಯನಿಗೆ ಮೆಡಿಕಲ್ ಕಾಲೇಜಿನಲ್ಲಿ ಡಾಕ್ಟರಿಕೆಯ ಮೂಲಭೂತ ಮಂತ್ರವನ್ನು ಮಾತ್ರ ಹೇಳಿಕೊಟ್ಟಿರುತ್ತಾರೆ. ಆತ ವೈದ್ಯನಾದ ಮೇಲೆ ಆತ ತನ್ನ ಕೆಲಸವನ್ನು ಮಾಡುತ್ತಾ ಕಲಿಯುತ್ತಾನೆ, ಕಲಿಯುತ್ತಾ ಮಾಡುತ್ತಾನೆ. ಹೀಗೇ ಬೆಳೆಯುತ್ತಾನೆ.

ಕುಂದೇರ ಇದಕ್ಕೆ ಒಪ್ಪುವುದಿಲ್ಲ. ಆತ ಪ್ರತಿಪಾದಿಸುವ ‘ಸಾಹಿತಿಯ ಮರಣ’ದ ಕಾನ್ಸೆಪ್ಟಿನಲ್ಲಿ ಆತ ಹೇಳುವುದು ಒಬ್ಬ ಸಾಹಿತಿ ಯಾವಾಗ ಓದುವುದನ್ನು ನಿಲ್ಲಿಸುತ್ತಾನೋ ಆಗ ಆತ ಸತ್ತ ಎಂದು ತಿಳಿದುಕೊಳ್ಳಿ ಎಂದು ಹೇಳುತ್ತಾನೆ. ಆತನಿಗೆ ಓದಿಲ್ಲದ ಯಾವ ಬರಹವೂ ಪ್ರಸ್ತುತವಾಗುವುದಿಲ್ಲ. ಈತನ ಬರಹಗಳನ್ನೇ ನೋಡಿದರೆ ಅರ್ಥವಾಗುತ್ತದೆ. ಅವನಿಗೆ ತನ್ನ ಓದುಗನ ಬುದ್ಧಿಮತ್ತೆಯ ಬಗ್ಗೆ ಬಹಳ ನಂಬಿಕೆ. ತನ್ನ ಬರಹ ಎಲ್ಲರಿಗೂ ಪ್ರಸ್ತುತವಗಬೇಕೆಂಬ ಪ್ರಲೋಭನೆಯೂ ಇವನಿಗಿಲ್ಲ.

ನಾನು ಈ ಸಂದರ್ಭದಲ್ಲಿ ಅರ್ಥೈಸಿಕೊಂಡಿರುವುದೆಂದರೆ -ಓದಿಕೊಂಡಿರುವ ಬರಹಗಾರರು ಮತ್ತು ಕೇವಲ ಬರಹಗಾರರು ಎಂಬ ಎರಡು ಪ್ರಬೇಧಗಳಿವೆಯೇನೊ. ಮೊದಲ ಗುಂಪಿನವರು ಬಹಳ ಓದಿಕೊಂಡಿರುತ್ತಾರೆ. ಅವರಿಗೆ ಶ್ರೇಷ್ಠವಾದುದ್ದನ್ನೆಲ್ಲಾ ಓದುವ ಆಸೆ ಅದಮ್ಯವಾಗಿದೆ. ಆದರೆ ಇವರಿಗೆ ಬರೆಯುವ ಗುಣ ಹುಟ್ಟಿನಿಂದಲೂ ಇದೆ. ಕೆಲವರಿಗೆ ಬರಹ ಅವರ ಓದಿನ ಉಪೋತ್ಪನ್ನವೂ ಆಗಿರಬಹುದು. ಅಂದರೆ ತಾವು ಓದಿದ್ದನ್ನು ಇನ್ನೊಬ್ಬರಿಗೆ ಅರ್ಥಮಾಡಿಸಲೂ ಇವರು ಬರೆಯಬಹುದು. ಇವರು ಓದಿರುವ ಪುಸ್ತಕಗಳು, ಮೆಚ್ಚಿನ ಲೇಖಕರ ಭಾಷೆ ಇವರ ಬರವಣಿಗೆಯ ಮೇಲೆಯೂ ಪ್ರಭಾವ ಬೀರಿರುತ್ತದೆ. ಅದನ್ನೆಲ್ಲಾ ಮೀರುವ ಆಸೆಯಿಂದ ಇವರು ಬರೆಯುತ್ತಿರುತ್ತಾರೆ ಎಂದು ಹೇಳಿದರೆ ಕೊಂಚ ಮಹತ್ವಾಕಾಂಕ್ಷೆಯಷ್ಟೇ ಹೊರತು ಉತ್ಪ್ರೇಕ್ಷೆಯೇನಲ್ಲ. ಆದರೆ ಆ ನಿಟ್ಟಿನಲ್ಲಿ ಇವರ ನೆಲೆಯಿರುವುದರಿಂದ ಇವರ ಕೃತಿಗಳು ಅತಿ ಜಾಗರೂಕವಾಗಿ ಬರೆದಿದ್ದಾಗಿರುತ್ತದೆ. ಪ್ರತಿ ವಿವರಗಳಿಗೂ ಮಹತ್ವವಿರುತ್ತವೆ. ಪ್ರತಿಯೊಂದು ಸಾಲೂ ಲೆಕ್ಕವಿಟ್ಟು ಬರೆದಿರುತ್ತದೆ. ಹಾಗೆಯೇ ಪರಿಷ್ಕರಣವೂ ಚೆನ್ನಾಗಿಯೇ ಆಗಿರುತ್ತದೆ. ಬಹುಶಃ ಕುಂದೇರ, ಪಮುಕ್, ಕುಟ್ಜೀ ಮುಂತಾದವರು ಈ ಗುಂಪಿಗೆ ಸೇರಿದವರು.

ಎರಡನೇ ಗುಂಪಿನವರು ಕೇವಲ ಬರಹಗಾರರು, ಗ್ರೆಗರಿಯಂತೆ ಹುಟ್ಟು ಬರಹಗಾರರು. ಇವರು ಓದಿಗಿಂತ ತಮ್ಮ ಬರಹದ ಮೇಲೆಯೇ ಹೆಚ್ಚಿನ ನಂಬಿಕೆಯನ್ನಿಟ್ಟುಕೊಂಡವರು. ತಮ್ಮ ಸ್ವಾಭಾವಿಕ ಶೈಲಿ ಮತ್ತು ಜೀವನಾನುಭವದ ಮೇಲೆ ಇವರಿಗೆ ಎಲ್ಲಿಲ್ಲದ ಆತ್ಮವಿಶ್ವಾಸವಿದೆ. ಅವರು ತಮ್ಮ ಬರಹದಲ್ಲಿ ಎಷ್ಟು ಮಗ್ನರಾಗಿದ್ದಾರೆ ಅಥವಾ ಎಷ್ಟು ಪ್ರಾಲಿಫಿಕ್ ಆಗಿ ಬರೆಯುತ್ತಾರೆ ಎಂದರೆ ಅವರಿಗೆ ತಮ್ಮ ಬರಹವನ್ನೇ ಇನ್ನೊಮ್ಮೆ ಮತ್ತೆ ತಿದ್ದ್ದುವ ತಾಳ್ಮೆಯಿಲ್ಲ. ತಮ್ಮ ಸ್ಪಾಂಟೆನಿಯಿಟಿಯ ಬಗ್ಗೆ ಅವರಿಗೆ ಅಪಾರ ವಿಶ್ವಾಸ. ಹೆಚ್ಚಿನ ಬೌದ್ಧಿಕತೆ ಇವರಿಗೆ ಬೇಕಿಲ್ಲ. ಜೀವನದ ಸಣ್ಣ ಸಣ್ಣ ಘಟನೆಯ ವಿವರಗಳನ್ನು ಇವರು ಗಮನಿಸುತ್ತಿರುತ್ತಾರೆ ಮತ್ತು ಈ ವಿವರಗಳನ್ನು ಅಕ್ಷರದ ಕುಸುರಿಯಲ್ಲಿ ನೇಯುವ ಪರಿಣಿತಿ ಇವರಲ್ಲಿದೆ.

ಓದುಗರು ಎರಡೂ ರೀತಿಯ ಬರಹಗಳನ್ನೂ ಇಷ್ಟಪಟ್ಟಿರುತ್ತಾರೆ. ಮುಖ್ಯವಾಗಿ ಈ ಎರಡು ಪ್ರಬೇಧಗಳ ಬಗ್ಗೆ ಯಾವ ಓದುಗನಿಗೂ ಆಸಕ್ತಿಯೇನಿಲ್ಲ. ಯಾರಿಗೆ ಯಾವುದು ಇಷ್ಟ ಎನ್ನುವುದೂ ಬಹಳ ಕಷ್ಟ. ಆದರೆ ಈ ಎರಡೂ ಗುಂಪಿನ ಬರಹಗಾರರು ತಮ್ಮ ಗುಣಗಳನ್ನು ತೀರ ಎಕ್ಸ್‌ಕ್ಲ್ಯೂಸಿವ್ ಎಂದು ತಿಳಕೊಂಡು ಓದಿಕೊಂಡು ಬರೆಯುವವರ ಕೃತಿಗಳನ್ನು ಬೌದ್ಧಿಕತೆಯ ಭಾರದಿಂದ ಅಳೆಯುವುದು ಮತ್ತು ಸ್ಪಾಂಟೇನಿಯಸ್ ಲೇಖಕರನ್ನು ಬೌದ್ಧಿಕತೆಯನ್ನು ವಿರೋಧಿಸುವವರು, ಜೀವನಪ್ರೀತಿಯ ಹೆಸರಲ್ಲಿ ಕ್ಯಾಂಡಿಫ್ಲಾಸ್ ಬರಹಗಳನ್ನು ನಮ್ಮಮುಂದೆ ಇಡಿಸುವವರು ಎಂದು ಟೀಕಿಸಲು ತೊಡಗಿದಾಗ ಗೊಂದಲ ಶುರುವಾಗುತ್ತದೆ. ಎಲ್ಲರೂ ಕನಿಷ್ಠ ಸಾಹಿತ್ಯ ಕೃಷಿಗೆ ಎಷ್ಟು ಬೇಕೋ ಅಥವಾ ಕಸಬುದಾರಿಕೆಯನ್ನು ಕಲಿಸಲು ಬೇಕಾಗುವಷ್ಟಾದರೂ ಓದಿಕೊಂಡಿಯೇ ಇರುತ್ತಾರೆ. ಹಾಗೆಯೇ ಸಿಕ್ಕಾಪಟ್ಟೇ ಓದಿರುವವನೂ ಬರೇ ತನ್ನ ಓದಿನ ಆಧಾರದ ಮೇಲೆ ಮಹತ್ವದ ಕೃತಿಗಳನ್ನು ರಚಿಸಲಾಗುವುದಿಲ್ಲ. ಕುವೆಂಪುರವರ ಮಲೆಗಳಲ್ಲಿ ಮದುಮಗಳು ಇದಕ್ಕೆ ಉತ್ತಮ ಉದಾಹರಣೆ. ಟಾಲ್‌ಸ್ಟಾಯ್ ಮಾದರಿಯ ಕಥನ ಶೈಲಿ ಇದು ಅನ್ನಿಸಿದರೂ ಒಬ್ಬ ಹುಟ್ಟು ಬರಹಗಾರನಿಗೆ ಇರಬೇಕಾದ ಸ್ವಾಭಾವಿಕತೆ, ಸರಳತೆ, ಪಾತ್ರಗಳ ಆಳಕ್ಕಿಳಿಯುವ ಗುಣ ಮತ್ತು ಅಪ್ಪಟ ಜೀವನಾನುಭವ ಎಲ್ಲವೂ ಇದರಲ್ಲಿ ಅಡಕವಾಗಿದೆ.

ಅಂದರೆ, ಓದೂ ಬರಹವೂ ಜತೆಜತೆಗೇ ಸಾಗುವ ಪಯಣ. ಒಂದನ್ನು ಬಿಟ್ಟು ಇನ್ನೊಂದರ ಅಸ್ತಿತ್ವ ಬಡವಾಗುತ್ತದೆ-ಬರಹಗಾರನಿಗೆ.